ಯಾದಗಿರಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 60 ರೈತರಿಗೆ ಸಜ್ಜೆ, ತೊಗರಿ ಬಿತ್ತನೆ ಬೀಜದ ಪ್ಯಾಕೇಟ್ಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಕಿಸಾನ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರುಕುಂದಿ ಮಾತನಾಡಿ, ರಾಹುಲ್ಗಾಂಧಿ ಅವರ ನಿರ್ದೇಶನದಂತೆ ರೈತರಿಗೆ ಅಗತ್ಯವಾಗಿ ಬೇಕಾದ ಬಿತ್ತನೆ ಬೀಜಗಳನ್ನು ವಿತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಯಾವುದೇ ಆಡಂಬರದ ಆಚರಣೆ ಇಲ್ಲದೆ ರೈತರಿಗೆ ನೆರವಾಗುವ ಉದ್ದೇಶದಿಂದ ಬಿತ್ತನೆ ಬೀಜ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.
ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ, ಬಡವರ ಪರವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಹಿಳಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಮಂಜುಳಾ ಗೂಳಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರಿಗೆ ಬ್ರೆಡ್, ಬಾಳೆಹಣ್ಣು, ನೀರಿನ ಬಾಟಲು ವಿತರಿಸಲಾಯಿತು.
ಇದಕ್ಕೂ ಮೊದಲು ಹುತಾತ್ಮ ವೀರಯೋಧರ ಸ್ಮಾರಣಾರ್ಥ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾನಸಗಲ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ ಜೈನ್, ಎಸ್ಎಸ್ಯುಐ ಜಿಲ್ಲಾಧ್ಯಕ್ಷ ಸಂಜಯಕುಮಾರ ಕಾವಲಿ, ನಗರಸಭೆ ಸದಸ್ಯ ಹಣಮಂತ ನಾಯಕ, ಮುಖಂಡ ಶರಣಪ್ಪ ಕೊಯಿಲೂರು, ಸೋಮಶೇಖರ ಮಸ್ಕನಳ್ಳಿ, ಮಲ್ಲು ಇಟೆ, ಮಲ್ಲು ವರ್ಕನಳ್ಳಿ ಇದ್ದರು.