ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣನ ಆರ್ಭಟ: ಮಳೆಗೆ ರೈತರ ಹರ್ಷ; ಜನಜೀವನ ಅಸ್ತವ್ಯಸ್ತ

ಹಲವೆಡೆ ರಾಶಿ ಮಾಡಿದ್ದ ಬೆಳೆ ಹಾನಿ
Last Updated 6 ಜೂನ್ 2021, 6:12 IST
ಅಕ್ಷರ ಗಾತ್ರ

ಕೆಂಭಾವಿ: ವಲಯದಲ್ಲಿ ಶನಿವಾರ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಶನಿವಾರ ಬೆಳಿಗ್ಗೆಯಿಂದ ಇಡೀ ದಿನ ಸೆಕೆಯ ಅನುಭವವಿತ್ತು. ಸಂಜೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು 45 ನಿಮಿಷ ಎಡಬಿಡದೆ ಸುರಿಯಿತು. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ಹಿತಾನುಭವ ನೀಡಿತು. ಉತ್ತಮ ಮಳೆಗೆ ಜಮೀನುಗಳು ಹದವಾದವು.

ಮತ್ತೊಂದೆಡೆ ವರುಣದೇವ ಭತ್ತ ಬೆಳೆದ ರೈತರಿಗೆ ಕಣ್ಣೀರು ತರಿಸಿದ್ದು, ಲಾಕ್‌ಡೌನ್ ಪರಿಣಾಮ ವರ್ತಕರು ಇಲ್ಲದೆ ರಸ್ತೆ ಪಕ್ಕ, ಶಾಲೆ ಮೈದಾನ, ಜಮೀನುಗಳಲ್ಲಿ ರಾಶಿ ಮಾಡಿದ ರೈತರು ಧಾರಾಕಾರ ಮಳೆಯಿಂದ ಕಂಗಾಲಾಗಿದ್ದಾರೆ.

ಜನಜೀವನ ಅಸ್ತವ್ಯಸ್ತ: ಭಾರಿ ಮಳೆಗೆ ಕೆಂಭಾವಿ ವಲಯದ ಜನಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದಾಗಿ ಚರಂಡಿ ಭರ್ತಿಯಾಗಿ ಕೊಳಚೆ ನೀರು ರಸ್ತೆಗಳ ಮೇಲೆ ಹರಿಯಿತು.

ತಗ್ಗು ಪ್ರದೇಶದ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ನಿವಾಸಿಗಳು ಮಳೆ ನೀರನ್ನು ಮನೆಯಿಂದ ಹೊರ ಹಾಕುವುದರಲ್ಲೇ ರಾತ್ರಿ ಕಳೆದರು.

ಉತ್ತಮ ಮಳೆ

ಹುಣಸಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಬೇಸಿಗೆಯಿಂದ ಬಿಸಿಯಾಗಿದ್ದ ಭೂಮಿ ತಂಪಾಗಿದೆ.

ಮಳೆಯಿಂದಾಗಿ ಯಾವುದೇ ಹಾನಿಯಾಗಿಲ್ಲ. ಆದರೆ ತಗ್ಗು ಪ್ರದೇಶದ ಅಂಗಡಿ ಮತ್ತು ಸ್ಥಳಗಳಿಗೆ ನೀರು ನುಗ್ಗಿದ್ದರಿಂದಾಗಿ ಬೆಳಿಗ್ಗೆ ಪಟ್ಟಣದಲ್ಲಿ ಅಂಗಡಿ ಮಾಲಿಕರು ನೀರು ಹೊರ ಹಾಕುವ ಕಾರ್ಯದಲ್ಲಿ ನಿರತರಾಗಿದ್ದರು.

ಹುಣಸಗಿ 33 ಮಿ.ಮೀ, ನಾರಾಯಣಪುರ 18 ಮಿ.ಮೀ, ಕಕ್ಕೇರಾ 47 ಮಿ.ಮೀ ಮಳೆ ಬಿದ್ದಿದೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿ. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡಿಟ್ಟುಕೊಂಡಿರುವ ರೈತರಿಗೆ ಈ ಮಳೆ ಅನುಕೂಲವಾಗಲಿದೆ ಎಂಬ ಮಾತುಗಳು ಮಳೆಯಾಶ್ರಿತ ಪ್ರದೇಶದ ರೈತವಲಯದಲ್ಲಿ ಕೇಳಿ ಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT