ಯಾದಗಿರಿ: ಅಕಾಲಿಕ ಮಳೆ, ಗಾಳಿಯಿಂದಾಗಿ ಭತ್ತದ ಬೆಳೆ ಅಪಾರ ನಷ್ಟವುಂಟಾಗಿದ್ದು, ಇನ್ನೇನು ಕಟಾವ್ಗೆ ಬಂದ ಬೆಳೆ ನೆಲಕಚ್ಚಿದೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕೆಂದು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ.
ಯಾದಗಿರಿ ಮತಕ್ಷೇತ್ರದ ವಡಗೇರಾ ತಾಲ್ಲೂಕಿನ ನಾಯ್ಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ನಾಲ್ವಡಿಗಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆ ಮತ್ತು ಗಾಳಿಯಿಂದಾಗಿ ರೈತರು ಬೆಳೆದ ಭತ್ತದ ಬೆಳೆ ನೆಲಸಮಗೊಂಡಿದ್ದು ಅಪಾರ ಹಾನಿಯಾಗಿದೆ. ಕೊಯ್ಲಿಗೆ ಬಂದಿದ್ದ ಬೆಳೆ ನೆಲಕಚ್ಚಿದ್ದು, ಮಷಿನ್ನಿಂದ ಕಟಾವ್ ಮಾಡಲೂ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಇದುವರೆಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ. ಸರ್ವೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ಥಳಕ್ಕೆ ಸಿಬ್ಬಂದಿಯನ್ನು ಕಳಿಸಿ ಸರ್ವೇ ಮಾಡಿಸಿ ವರದಿ ಪಡೆದು ಸರ್ಕಾರಕ್ಕೆ ಕಳಿಸಿಕೊಟ್ಟು ಸೂಕ್ತ ಪರಿಹಾರಕ್ಕೆ ಮುಂದಾಗಬೇಕು. ಆ ಮೂಲಕ ನೊಂದ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ.