ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಟಂಟಂನಲ್ಲಿ 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ, ಐವರು ಮೃತಪಟ್ಟಿದ್ದರೆ, ಐವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಮತ್ತು ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದಾರೆ.
ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.