ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಖಾನಾಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಶಾಸಕ ವೆಂಕಟರೆಡ್ಡಿ ಮುದ್ನಾಳ ಖಾಸಗಿ ವಾಹನ ತರಿಸಿ ಅವರನ್ನು ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಮ್ಮ ಮತಕ್ಷೇತ್ರದ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ 6 ಜನ ಸಾಲ ಬಾಧೆಯಿಂದ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರ ಜೊತೆ ದೋರನಹಳ್ಳಿಗೆ ತೆರಳುತ್ತಿರುವ ವೇಳೆ ದಾರಿ ಮಧ್ಯೆ ಕಾರು ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿತ್ತು.
ಖಾನಾಪುರ ಗ್ರಾಮದ ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿರುವುದನ್ನು ಶಾಸಕ ಮುದ್ನಾಳ ಗಮನಿಸಿ ಧೈರ್ಯ ತುಂಬಿ ಚಿಕಿತ್ಸೆಗೆ ಕಳುಹಿಸಲು ವಾಹನ ವ್ಯವಸ್ಥೆ ಮಾಡಿದರು. ನಂತರ ಜನಸಂದಣಿಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ದೋರನಹಳ್ಳಿಗೆ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.