ಯಾದಗಿರಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೆಲಸಗಾರರಿಗೆ ಜಾತಿ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಪಂಚಾಯಿತಿ ಬಳಿ ಸೋಮವಾರ ಜಮಾಯಿಸಿ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ದಾವಲಸಾಬ ನದಾಫ್ ಮಾತನಾಡಿ, ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಅಡಿಯಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ವೇತನ ನೀಡುವಾಗ ತಾರತಮ್ಯ ಮಾಡುವ ಸರ್ಕಾರದ ಉದ್ದೇಶವನ್ನು ಖಂಡಿಸುತ್ತೇವೆ. ದೇಶಾದ್ಯಂತ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಮತ್ತು ದಲಿತ ಶೋಷಣ್ ಮುಕ್ತಿ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಉದ್ಯೋಗ ಖಾತ್ರಿ ವೇತನವನ್ನು ಜಾತಿ ಆಧಾರದಲ್ಲಿ ವಿಭಜಿಸುವುದು ಮತ್ತು ಅವರಲ್ಲಿ ಎಸ್.ಸಿ., ಎಸ್.ಟಿ. ಮುಂತಾದ ತಾರತಮ್ಯ ಮಾಡುವುದು ಎಂದಿಗೂ ಸಮರ್ಥನೀಯವಲ್ಲ ಎಂದು ಆರೋಪಿಸಿದರು.
ಸಮಾನ ವೇತನ ಪಡೆಯಬೇಕಾದ ಕೆಲಸಗಾರರಿಗೆ ತಾರತಮ್ಯ ಮಾಡಿದಂತಾಗುತ್ತದೆ. ವೇತನ ಪಾವತಿಯಲ್ಲಿ ಅನಗತ್ಯ ವಿಳಂಬ ಆಗುವುದು. ವೇತನ ಪಾವತಿಯ ಪ್ರಕಿಯೆಯಲ್ಲಿ ಯಾವ ಸದುದ್ದೇಶವಿಲ್ಲದ ಗೊಂದಲಕ್ಕೆ ಆಸ್ಪದ ಮಾಡಿದಂತೆ ಆಗುತ್ತದೆ. ಎಸ್.ಸಿ., ಎಸ್.ಟಿ., ಕೆಲಸಗಾರರ ಹಕ್ಕುಗಳಿಗೆ ಅನ್ಯಾಯವಾಗುತ್ತದೆ ಎಂದರು.
ಇಲಾಖೆಯ ಈ ಅನಗತ್ಯ ಶಿಫಾರಸನ್ನು ಹಿಂಪಡೆಯಬೇಕು. ಬದಲಾಗಿ ವರ್ಷದಲ್ಲಿ 200 ದಿನಗಳ ಕೆಲಸ ನೀಡಬೇಕು. ದಿನದ ವೇತನವನ್ನು ₹ 600ಕ್ಕೆ ಏರಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ಕೆಲಸಗಾರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.