ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಸವಿತಾ ಮಹರ್ಷಿ ಜಯಂತಿ ಅದ್ಧೂರಿ ಆಚರಣೆ

Last Updated 12 ಫೆಬ್ರುವರಿ 2020, 9:55 IST
ಅಕ್ಷರ ಗಾತ್ರ

ಯಾದಗಿರಿ: ‘ಶರಣರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಿತಾ ಮಹರ್ಷಿ ಜಯಂತ್ಯುತ್ಸವ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮರ್ಹಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ವ್ಯಕ್ತಿಯು ಸುಂದರವಾಗಿ ಕಾಣಲು ಸವಿತಾ ಸಮಾಜದ ಬಂಧುಗಳು ನಿರ್ವಹಿಸುವ ಕಾಯಕ ಅತಿ ಶ್ರೇಷ್ಠ. ಸವಿತಾ ಸಮಾಜವು ಕ್ಷೌರಿಕ ವೃತ್ತಿ ಮಾಡುವಲ್ಲಿ ಯಾವುದೇ ಮೇಲು-ಕೀಳು ಎಂಬ ಭಾವನೆ ತಾಳದೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತದೆ. ಸಮಾಜದಲ್ಲಿ ವ್ಯಕ್ತಿಯ ನಡೆ-ನುಡಿ, ವ್ಯಕ್ತಿತ್ವದ ಆಧಾರದ ಮೇಲೆ ಆತನನ್ನು ಗುರುತಿಸಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಕುಟುಂಬದಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವ ಮೂಲಕ ಒಳ್ಳೆಯ ನಾಗರಿಕರನ್ನಾಗಿ ಮಾಡಬೇಕು. ಮಹಿಳೆಯರು ಕೂಡ ಸಮಾಜದಲ್ಲಿ ನಡೆಯುವ ಪ್ರತಿಯೊಂದು ಆಗು-ಹೋಗುಗಳ ಕುರಿತು ತಿಳಿದುಕೊಳ್ಳುವುದು ಅಗತ್ಯವಾಗಿದೆ’ ಎಂದರು.

ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಭಾರಿ ಪ್ರಾಂಶುಪಾಲ ಅಶೋಕ ಉಪನ್ಯಾಸ ನೀಡಿ, ‘ಹಿಂದೂ ಧರ್ಮದ ಉಳಿವಿಗೆ ಅನೇಕ ಋಷಿ ಮುನಿಗಳು ಕಾರಣವಾಗಿದ್ದು, ಅಂತಹ ಋಷಿಗಳಲ್ಲಿ ಸವಿತಾ ಮಹರ್ಷಿಗಳು ಒಬ್ಬರು. ಬ್ರಹ್ಮ, ವಿಷ್ಣು, ಮಹೇಶ್ವರರು ಯಜ್ಞ-ಯಾಗ ಮಾಡುತ್ತಿರುವ ಸಂದರ್ಭದಲ್ಲಿ ಬೆಂಕಿಯ ಕಿಡಿ ಶಿವನ ಮುಖಕ್ಕೆ ತಗುಲಿದಾಗ, ಪಾರ್ವತಿಯು ಮುಖ ವಿಕಾರವಾಗಿ ಕಾಣುತ್ತಿದೆ ಎಂದು ತಿಳಿಸುತ್ತಾಳೆ. ಆಗ ಶಿವನು ತನ್ನ ಮುಖವನ್ನು ಸುಂದರವನ್ನಾಗಿಸಲು ಬಲಗಣ್ಣಿನಿಂದ ಸೃಷ್ಟಿಸಿದ ವ್ಯಕ್ತಿಯೇ ಸವಿತಾ ಮಹರ್ಷಿ ಎಂದು ಪುರಾಣ ಪುಣ್ಯ ಕಥೆಗಳಿಂದ ತಿಳಿದುಬರುತ್ತದೆ’ ಎಂದು ಹೇಳಿದರು.

ಸವಿತಾ ಸಮಾಜದ ಜಿಲ್ಲಾ ಪ್ರತಿನಿಧಿ ಮಲ್ಲಣ್ಣ ವಡಿಗೇರಿ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಗೋಪಾಲ ಕಿಲ್ಲದ, ನಾಗಪ್ಪ ಹತ್ತಿಕುಣಿ, ಸವಿತಾ ಸಮಾಜದ ರಾಜ್ಯ ಮಾಜಿ ಉಪಾಧ್ಯಕ್ಷ ರಮೇಶ್ ಪಿ.ಚಿನ್ನಾಕರ, ರಾಜ್ಯ ಸಮಿತಿ ಸದಸ್ಯರಾದ ಸೂರ್ಯಕಾಂತ ಚಿನ್ನಾಕರ ಹಾಗೂ ಸಮಾಜದ ಮುಖಂಡರು, ಮಹಿಳೆಯರು ಇದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ಕಲಾ ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಸುಬಮ ಪದವಿ ಕಾಲೇಜಿನ ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.

ಮೆರವಣಿಗೆ:ನಗರದಲ್ಲಿ ಕಲಾತಂಡಗಳೊಂದಿಗೆ ಸವಿತಾ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.‌

‌***

ಸವಿತಾ ಸಮಾಜ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಂದೆ ಬರಬೇಕಾದರೆ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು
-ಅಪ್ಪಣ್ಣ ಚಿನ್ನಾಕಾರ, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT