ಸುರಪುರ: ಪರಿಶಿಷ್ಟ ದಿನಾಚರಣೆ ನಿಮಿತ್ತ ಸುರಪುರ ಪೊಲೀಸ್ ಉಪವಿಭಾಗದಿಂದ ನಗರದ ಪೊಲೀಸ್ ಠಾಣೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ಕುಂದುಕೊರತೆ ಸಭೆಯನ್ನು ಪರಿಶಿಷ್ಟ ಮುಖಂಡರು ಬಹಿಷ್ಕರಿಸಿದ ಘಟನೆ ನಡೆಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಮುಖಂಡರು, ‘ಕಳೆದ ಎರಡು ವರ್ಷಗಳಿಂದ ಯಾದಗಿರಿ ಜಿಲ್ಲೆ ಮತ್ತು ಸುರಪುರ ಉಪ ವಿಭಾಗದಲ್ಲಿ ಪರಿಶಿಷ್ಟರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದರೂ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡುವಲ್ಲಿ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿದರು.
‘ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ಅನ್ಯಾಯ ನಡೆದಾಗ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಸಭೆಯಲ್ಲಿ ಭಾಗವಹಿಸುವುದಿಲ್ಲ’ ಎಂದು ಸಭೆಯಿಂದ ಹೊರ ನಡೆದರು.
ಪೊಲೀಸ್ ಅಧಿಕಾರಿಗಳು ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬನ್ನಿ ಕುಳಿತುಕೊಂಡು ಆಗುತ್ತಿರುವ ಸಮಸ್ಯೆಗಳನ್ನು ಚರ್ಚಿಸೋಣ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು. ಆದರೆ, ಮುಖಂಡರು ತಮ್ಮ ಪಟ್ಟು ಸಡಿಲಿಸಲಿಲ್ಲ. ಪರಿಶಿಷ್ಟರ ಮೇಲೆ ದೌರ್ಜನ್ಯವೆಸಗಿರುವ ಆರೋಪಿಗಳನ್ನು ಬಂಧಿಸಬೇಕು. ಅಲ್ಲಿಯವರೆಗೆ ಸಭೆಗೆ ಬರುವುದಿಲ್ಲ ಎಂದು ಹೇಳುತ್ತಾ ಠಾಣೆಯಿಂದ ಹೊರ ನಡೆದರು.