ಕೆಂಭಾವಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಬಾಲಕಿಯರ ಮಾದರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಸುಶೀಲಾಬಾಯಿ ಬಿರಾದಾರ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಂಡು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹೆಚ್ಚಿನ ಅನುದಾನ ನೀಡುವುದರ ಜತೆಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪ್ರತಿ ವರ್ಷ ಶಾಲಾ ಆರಂಭದಲ್ಲಿ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ, ನೋಟ್ಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.
ಶಾಲೆಯಲ್ಲಿ ಶಿಕ್ಷಕರು ಉತ್ತಮ ಬೋಧನೆ ಮಾಡುತ್ತಿರುವದರಿಂದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಬಹುತೇಕ ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಕ್ರೀಡೆ, ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೊರೊನಾದ ಕಾರಣ 2 ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು ಆದ ಕಾರಣ ಸರ್ಕಾರ ಮಕ್ಕಳ ಓದಿಗೆ ಸಹಕಾರಿಯಾಗಲಿ ಎಂದು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು.
ಇಡಿ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ ಹೂಗೂಚ್ಛ ನೀಡಿ ಬರಮಾಡಿಕೊಳ್ಳಲಾಯಿತು.
ದೈಹಿಕ ಶಿಕ್ಷಕ ರಾಜಅಹಮದ್ ಹುಳಬುತ್ತಿ ಮಾತನಾಡಿದರು. ಎಸ್ಡಿಎಮ್ಸಿ ಅಧ್ಯಕ್ಷ ಶರಣಗೌಡ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕಿಯರಾದ ಶಶಿಕಲಾ ಕುಲಕರ್ಣಿ, ತಾರಾಮತಿ ಕಾಸಾರ, ಮಹಾನಂದ ಅರಕೇರಿ, ರಾಜಶ್ರೀ ಹಿರೇಮಠ, ಭಾರತಿಬಾಯಿ ಪಾಸೋಡಿ, ಶಾರದಾ ಸಜ್ಜನ, ಎಸ್ಡಿಎಮ್ಸಿ ಸದಸ್ಯರಾದ ಹಳ್ಳೆರಾವ ಕುಲಕರ್ಣಿ, ಮಹಿಬೂಬಸಾಬ ಜಿಲಾನಿ, ಮಹಾದೇವಿ ವಜ್ಜಲ ಸೇರಿದಂತೆ ಬಿಸಿಯೂಟದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
ಇದಲ್ಲದೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಎಲ್ಲ ಶಾಲೆಗಳಲ್ಲಿ ಅದ್ಧೂರಿಯಾಗಿ ಶಾಲಾ ಪ್ರಾರಂಭೋತ್ಸವವನ್ನು ಮಾಡಲಾಯಿತು. ಅನೇಕ ಕಡೆ ವಿದ್ಯಾರ್ಥಿಗಳು ಪ್ರಭಾತ ಪೇರಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.