ಸುರಪುರ:‘ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಚಿಗುರು ಕಾರ್ಯಕ್ರಮ ನೆರವಾಗಲಿದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಇದು ಉತ್ತಮ ವೇದಿಕೆ’ ಎಂದು ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ಹೇಳಿದರು.
ರಂಗಂಪೇಟೆಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಮಕ್ಕಳ ‘ಚಿಗುರು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಮುಖಂಡ ಶಂಕರನಾಯಕ ಮಾತನಾಡಿ, ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸರ್ಕಾರ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದರಲಿ ಚಿಗುರು ಕಾರ್ಯಕ್ರಮ ವಿಶೇಷವಾಗಿದೆ’ ಎಂದರು.
ಮುಖಂಡ ಭೀಮಣ್ಣ ಬೇವಿನಾಳ ಮಾತನಾಡಿ, ‘ಸಂಗೀತ ಹಾಗೂ ಜನಪದದಲ್ಲಿ ಹಳ್ಳಿಯ ಸೊಗಡಿದೆ. ಇದು ಬದುಕಿಗೆ ಹತ್ತಿರವಾದ ಸಾಹಿತ್ಯವಾಗಿದ್ದು ನಮ್ಮ ಸಂಸ್ಕೃತಿ ಬಿಂಬಿಸುತ್ತವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸ್ವಾಗತಾರ್ಹ’ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ‘ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಳಲ್ಲಿರುವ ಪ್ರತಿಭೆ ಗುರುತಿಸಲು ಹಲವಾರು ಅವಕಾಶ ಮಾಡಿಕೊಡಲಾಗುತ್ತಿದೆ. ಜಾನಪದ ಕಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಪುಟ್ಟರಾಜ ಜನಕಲ್ಯಾಣ ಸಂಸ್ಥೆಯ ಅಧ್ಯಕ್ಷ ಕ್ಷೀರಲಿಂಗಯ್ಯ ಹಿರೇಮಠ ಬೋನ್ಹಾಳ ಮಾತನಾಡಿದರು. ಗುರುಕುಲ ಶಾಲೆಯ ಮುಖ್ಯ ಶಿಕ್ಷಕಿ ರಶ್ಮಿ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಂಬಿಕಾ ಸ್ವಾಗತಿಸಿದರು. ಅರುಧಂತಿ ನಿರೂಪಿಸಿದರು. ಸುಷ್ಮಾ ವಂದಿಸಿದರು.