ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೋಡೆಕಲ್ಲ ಗ್ರಾಮದಲ್ಲಿ ಗುರುವಾರ ನಡೆದ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗಲಾಟೆ ಸಂಬಂಧ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ 120 ಜನ ಆರೋಪಿಗಳು ಭಾಗಿಯಾಗಿದ್ದು, ಬಂಧನ ಕಾರ್ಯ ಮುಂದುವರಿದಿದೆ. ಸದ್ಯಕ್ಕೆ ಸ್ಥಳದಲ್ಲಿ ಪರಿಸ್ಥಿತಿ ಶಾಂತವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಮೂರು ಕೆಎಸ್ಆರ್ಪಿ ಮತ್ತು ಒಂದು ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, ಇಬ್ಬರು ಡಿಎಸ್ಪಿ, 100 ಕಾನ್ಸ್ಟೆಬಲ್, ಐದು ಸಿಪಿಐ ಮತ್ತು 10 ಪಿಎಸ್ಐ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ನಿರತರಾಗಿದ್ದಾರೆ.
ಏಪ್ರಿಲ್ 6 ರಿಂದ 8ರ ಸಂಜೆ 8ರ ವರಗೆ ಸುರಪುರ ಮತಕ್ಷೇತ್ರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೋಡೆಕಲ್ಲ ಗ್ರಾಮದಲ್ಲಿ ಗುರುವಾರ ಕೋಡೆಕಲ್ಲ ಬಸವೇಶ್ವರ ಜಾತ್ರೆ ನಡೆಯುತ್ತಿತ್ತು. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಬೆಂಬಲಿಗರು ಕಾರಿನ ಜೋರಾಗಿ ಹಾರ್ನ್ ಮಾಡಿಕೊಂಡು ತೆರಳುತ್ತಿದ್ದರು. ಇದನ್ನು ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದ್ದರಿಂದ ಗಲಾಟೆ ನಡೆದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.