ಸುರಪುರ: ‘ಲೋಕೋಪಯೋಗಿ ಮತ್ತು ಕೆಬಿಜೆಎನ್ಎಲ್ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ತನಿಖೆ ಆಗುವವರೆಗೆ ಗುತ್ತಿಗೆದಾರರ ಬಿಲ್ ತಡೆ ಹಿಡಿಯಬೇಕು’ ಎಂದು ಆಗ್ರಹಿಸಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಲೊಕೋಪಯೋಗಿ ಮತ್ತು ಕೆಬಿಜೆಎನ್ಎಲ್ ಇಲಾಖೆಗಳ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಅಧಿಕಾರಿಗಳು ಪ್ರತಿ ಕಾಮಗಾರಿಗೆ ಕಮಿಷನ್ ಪಡೆಯುತ್ತಿದ್ದಾರೆ’ ಎಂದು ಆರೋಪಿಸಿದರು.
‘ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸೇರಿ ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಪರಿಶಿಷ್ಟರಿಗೆ ಮೀಸಲಾಗಿರುವ ಅನುದಾನದಲ್ಲಿ ಕಾಮಗಾರಿ ಮಾಡದೆ ಬೋಗಸ್ ಬಿಲ್ ಎತ್ತಿ ಹಾಕಲಾಗುತ್ತಿದೆ’ ಎಂದು ದೂರಿದರು. ‘ಈ ಎರಡು ಇಲಾಖೆಗಳ ಕಾಮಗಾರಿಗಳ ಕುರಿತು ತನಿಖೆ ಮಾಡಿಸಬೇಕು. ಕಮಿಷನ್ ದಂಧೆಗೆ ಕಡಿವಾಣ ಹಾಕಬೇಕು. ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು. ಅಕ್ರಮ ಎಸಗಿರುವ ಗುತ್ತಿಗೆದಾರರ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಬೇಕು. ತನಿಖೆ ಮುಗಿಯುವವರೆಗೆ ಬಿಲ್ ಪಾವತಿ ಮಾಡಬಾರದು’ ಎಂದು ಆಗ್ರಹಿಸಿದರು.