ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ವೇತನ ಕಡಿತ: ಎಐಡಿಎಸ್‌ಒ ಪ್ರತಿಭಟನೆ

ಎಲ್ಲರಿಗೂ ವಿದ್ಯಾರ್ಥಿ ವೇತನ ಖಾತ್ರಿ ಪಡಿಸಲು ಆಗ್ರಹ
Published 22 ನವೆಂಬರ್ 2023, 5:06 IST
Last Updated 22 ನವೆಂಬರ್ 2023, 5:06 IST
ಅಕ್ಷರ ಗಾತ್ರ

ಯಾದಗಿರಿ: ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ನಗರದ ತಹಶೀಲ್ದಾರ್ ಕಚೇರಿಯ ಎದುರು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ., ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸೇರಿದಂತೆ ಹಲವು ವಿಭಾಗಗಳ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ವಿದ್ಯಾರ್ಥಿ ವೇತನವು ಮಂಜೂರಾಗಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅರ್ಜಿ ಹಾಕಿದ್ದ ವಿದ್ಯಾರ್ಥಿ ವೇತನಗಳು ಇಲ್ಲಿಯವರೆಗೂ ಕೂಡ ವಿದ್ಯಾರ್ಥಿಗಳಿಗೆ ದೊರೆತಿಲ್ಲ ಎಂದು ಆರೋಪಿಸಿದರು.

ಇನ್ನು ಕೆಲವು ದಿನಗಳ ಹಿಂದಷ್ಟೇ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯ ವೇತನವನ್ನು ಕೂಡಾ ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ₹5 ಸಾವಿರದಿಂದ ₹60 ಸಾವಿರದ ವರೆಗೆ ವಿತರಿಸಲ್ಪಡುತ್ತಿದ್ದ ವಿದ್ಯಾರ್ಥಿ ವೇತನದ ಮೊತ್ತವನ್ನು ₹1,100 ರಿಂದ 11,000ಕ್ಕೆ ಇಳಿಸಲಾಗಿದೆ ಇದು ಅತ್ಯಂತ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಎಂದರು.

ಎಲ್ಲಾ ಹಂತದ ಶಿಕ್ಷಣವು ವ್ಯಾಪಾರೀಕರಣಗೊಂಡು ಶುಲ್ಕಗಳು ಗಗನಕ್ಕೇರಿವೆ. ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದು ಅತ್ಯಂತ ದುಸ್ತರವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದ ಶಿಷ್ಯವೇತನವು ಸಾಕಷ್ಟು ಸಹಕಾರಿಯಾಗಿದೆ. ಈ ಶಿಷ್ಯವೇತನದಿಂದಾಗಿ ಬಡ ವಿದ್ಯಾರ್ಥಿಗಳು ಪಿಯ, ಪದವಿ ಸೇರಿದಂತೆ ಎಂಜಿನಿಯರಿಂಗ್ ಮತ್ತು ಮೆಡಿಕಲ್‌ನಂಥ ಉನ್ನತ ವ್ಯಾಸಂಗವನ್ನು ಪಡೆಯಬಹುದಾಗಿದೆ. ಆದರೆ, ಈಗ ಭಾರಿ ಪ್ರಮಾಣದಲ್ಲಿ ಶಿಷ್ಯವೇತನದ ಮೊತ್ತವನ್ನು ಕಡಿತಗೊಳಿಸಿರುವುದು ಹಾಗೂ ವಿತರಣೆಯಲ್ಲಿ ದೀರ್ಘ ವಿಳಂಬವಾಗಿರುವುದು ಕಾರ್ಮಿಕರ ಹಾಗೂ ಬಡಮಕ್ಕಳ ಶಿಕ್ಷಣದ ಕನಸುಗಳನ್ನು ಚಿವುಟಿ ಹಾಕಿದಂತಾಗಿದೆ ಎಂದರು.

ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್ ಮಾತನಾಡಿ, ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು. ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು. ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು. ಈ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ರಾಜ್ಯ ಸರ್ಕಾರವು ನೆರವಾಗಬೇಕೆಂದು ಒತ್ತಾಯಿಸಿದರು.

ಬಳಿಕ ಗ್ರೇಡ್–2 ತಹಶೀಲ್ದಾರ್‌ ಮೂಲಕ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಯಿತು. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಶಬಾನಾ, ಶಿಲ್ಪಾ, ಪದ್ಮಾ, ರಾಧಿಕಾ, ವಿದ್ಯಾ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT