ಸುರಪುರ: ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿಟಿಯು) ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧೀಜಿ ವೃತ್ತದಲ್ಲಿ ಸಮಾವೇಶಗೊಂಡರು. ಪ್ರತಿಭಟನಾಕಾರರು ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ದೇವಿಂದ್ರಪ್ಪ ಪತ್ತಾರ ಮಾತನಾಡಿ, ‘ದೇಶವು ಲಾಕ್ಡೌನ್ ನಿಯಮಗಳು ಮತ್ತು ಕೋವಿಡ್-19 ಸಾಂಕ್ರಾಮಿಕವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕರಾಳ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸುತ್ತಿದೆ’ ಎಂದು ಆರೋಪಿಸಿದರು.
ಮುಖಂಡ ಚನ್ನಪ್ಪ ಆನೇಗುಂದಿ ಮಾತನಾಡಿ, ‘ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕರ ಮೇಲೆ ಗುಲಾಮಗಿರಿಯ ಷರತ್ತುಗಳನ್ನು ವಿಧಿಸಲು ವಿನ್ಯಾಸಗೊಳಿಸಲಾಗಿದೆ. ಕಾರ್ಮಿಕ ಸಂಘಗಳ ರಚನೆಯನ್ನು ಇನ್ನಷ್ಟು ಜಟಿಲಗೊಳಿಸಿ ಮತ್ತು ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ’ ಎಂದು ದೂರಿದರು.
ಡಿ. ಉಮಾದೇವಿ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಸಂಹಿತೆಯನ್ನು ಹಾಗೂ ಎಪಿಎಂಸಿ, ವಿದ್ಯುತ್, ಭೂ ಸುಧಾರಣಾ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಸೋಫಿಯಾ ಸುಲ್ತಾನ ಅವರಿಗೆ ಸಲ್ಲಿಸಲಾಯಿತು.
ಮುಖಂಡರಾದ ಸುರೇಖಾ ಕುಲಕರ್ಣಿ, ಹಣಮಂತರಾಯ ಮಡಿವಾಳ, ದಾವೂದ್ ಇಬ್ರಾಹಿಂ ಪಠಾಣ, ಮಲ್ಲಪ್ಪ ವಗ್ಗಾ, ಭೀಮರಾಯ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು, ಕಾರ್ಮಿಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.