ಶಹಾಪುರ: ‘ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಅಗತ್ಯ ಸೌಲಭ್ಯಗಳನ್ನು ನೀಡಿದರೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹ 15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಹಾಗೂ ಸಿಬ್ಬಂದಿಗೆ ಹಾಗೂ ವಿದ್ಯಾರ್ಥಿಗಳಿಗೆ ₹ 25 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುವುದು‘ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ವಿದ್ಯಾರ್ಥಿಗಳಿಗೆ ಬುಧವಾರ ಕಳೆದ 2020-21ರ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮತ್ತು ಸ್ಮಾರ್ಟ್ ಕ್ಲಾಸ್ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ಹಲವಾರು ಯೋಜನೆಗಳು ಜಾರಿಗೆ ತಂದ ಪರಿಣಾಮ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ತಳಹದಿಯಾಗಿದೆ. ಬರುವ ದಿನದಲ್ಲಿ ಕಾಲೇಜಿನಲ್ಲಿ ಕಂಪ್ಯೂಟರ್ ಶಿಕ್ಷಣಕ್ಕಾಗಿ ₹ 5ಲಕ್ಷ ವೆಚ್ಚದಲ್ಲಿ 100 ಕಂಪ್ಯೂಟರ್ ಮತ್ತು 200 ಬೆಂಚ್ಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಸಮನ್ವಯ ಅಧಿಕಾರಿ ಶಂಕ್ರಮ್ಮ ಪಾಟೀಲ್, ಮಿನಾಕ್ಷಿ ರಾಠೋಡ್. ಪ್ರಾಧ್ಯಾಪಕರಾದ ಆನಂದಕುಮಾರ ಜ್ಯೋಷಿ, ಶರಣಬಸವ ದೇಸಾಯಿ. ಡಾ.ಹೈಯ್ಯಾಳಪ್ಪ ಸುರುಪುರಕರ್, ಮಹೇಶ ಪತ್ತಾರ, ಡಾ.ರಾಜು ಶಾಮರಾವ್ ಇದ್ದರು.