ಶಹಾಪುರ: ವಡಗೇರಾ ತಾಲ್ಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯೊಬ್ಬರು ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ತೆರಳಿದ್ದಾರೆ.
ತಡಿಬಿಡಿ ಗ್ರಾಮದಲ್ಲಿ 1ರಿಂದ 8ನೇ ತರಗತಿಯವರೆಗೆ ಶಾಲೆ ಇದ್ದು, 590 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇದರ ಜೊತೆಯಲ್ಲಿ 1 ರಿಂದ 5ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮ ಶಾಲೆ ಇದೆ.
ಕೇವಲ ನಾಲ್ವರು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ ಎನ್ನುತ್ತಾರೆ ಶಾಲೆಯ ಮುಖ್ಯಶಿಕ್ಷಕ ಭೀಮರಾಯ.
2021-2022 ಸಾಲಿನಲ್ಲಿ ಶಿಕ್ಷಕಿ ಪಾರ್ವತಿ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ನೇರವಾಗಿ ಬೆಂಗಳೂರಿಗೆ ತಮ್ಮ ಪತಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಗೆ ತೆರಳಿದ್ದಾರೆ.
‘ಶಿಕ್ಷಕರ ಕೊರತೆ ಇರುವಾಗ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕಾನೂನು ವ್ಯಾಪ್ತಿ ಮೀರಿ ನಿಯೋಜನೆ ಮೇಲೆ ಕಳುಹಿಸಿರುವುದು ಸರಿಯಲ್ಲ. ಶಿಕ್ಷಕಿಯನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ವರ್ಷದ ಹಿಂದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಕ್ರಮ ತೆಗೆದುಕೊಂಡಿಲ್ಲ’ ಎಂದು ರೈತ ಮುಖಂಡ ಯಲ್ಲಯ್ಯ ನಾಯಕ ವನದುರ್ಗ ಅವರು ತಿಳಿಸಿದ್ದಾರೆ.
ಇದರ ಬಗ್ಗೆ ಸ್ಪಷ್ಟನೆ ಪಡೆಯಲು ಬಿಇಒ ಹಾಗೂ ಡಿಡಿಪಿಐ ಅವರಿಗೆ ‘ಪ್ರಜಾವಾಣಿ’ ಸಂಪರ್ಕಿಸಿದಾಗ ಸಂಪರ್ಕಕಕ್ಕೆ ಸಿಗಲಿಲ್ಲ.