ಸೈದಾಪುರ: ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯುವ ಮೂಲಕ ಓಮೈಕ್ರಾನ್ ಹರಡುವುದನ್ನು ತಡೆಯಲು ಸಹಕರಿಸಬೇಕು ಎಂದು ಪ್ರಜ್ಞಾ ಕೈಗಾರಿಕಾ ತರಬೇತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲಿಪುರ ತಿಳಿಸಿದರು.
ಪಟ್ಟಣದ ಪ್ರಜ್ಞಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸೋಂಕಿನಿಂದ ನಮ್ಮನ್ನು ರಕ್ಷಿಸಿಕೊಳ್ಳುವುದರ ಜತೆಗೆ ನಮ್ಮವರನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆಯಬೇಕು. ಕೋವ್ಯಾಕ್ಸಿನ್ ಹಾಗೂ ಕೋವಿಶಿಲ್ಡ್ ಪರಿಣಾಮಕಾರಿ ಎಂದು ಮನ್ನಣೆ ಗಳಿಸಿದೆ. ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದರಿಂದ ಸೋಂಕಿನ ವಿರುದ್ಧ ಹೋರಾಡಲು ಮತ್ತಷ್ಟು ಶಕ್ತಿ ಹೆಚ್ಚುತ್ತದೆ ಎಂದರು.
ಸರ್ಕಾರ ದೇಶದ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲಸಿಕಾ ಅಭಿಯಾನ ಕೈಗೊಂಡು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಇದಕ್ಕೆ ಪೂರಕವಾಗಿ ಆರೋಗ್ಯ ಇಲಾಖೆ ಕೈ ಜೋಡಿಸಿ ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳಿಗೆ ಹೋಗಿ ಲಸಿಕೆಯನ್ನು ನೀಡುತ್ತಿರುವುದು ಶ್ಲಾಘನೀಯವಾದ ಕಾರ್ಯವಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಿರಿಯ ತರಬೇತಿ ಅಧಿಕಾರಿಗಳಾದ ಭೀಮಣ್ಣ ಮಡಿವಾಳಕರ್, ಶಂಕರ್ ರೆಡ್ಡಿ ಗೌಡ ಬಿಳ್ಹಾರ, ಮಹಾದೇವಪ್ಪ ದದ್ದಲ್, ಆರೋಗ್ಯ ಇಲಾಖೆಯ ಸಿಬ್ಬಂದಿ ಮಂಜುನಾಥ ಇದ್ದರು.