ಸೈದಾಪುರ: ಕೊರೊನಾ ಸೋಂಕಿನ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಶುಕ್ರವಾರ ಆರಂಭವಾದವು. ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು.
ಪಟ್ಟಣದ ವಿದ್ಯಾವರ್ಧಕ ಸಂಘದ ಶಾಲಾ-ಕಾಲೇಜುಗಳು, ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾದವು. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.
ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ಬಿಆರ್ಪಿ ಬಸವರಾಜ, ಸಿಆರ್ಪಿ ಮುಕುಂದರಾವ್, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ, ಮುಖ್ಯಗುರು ಹಾಗೂ ಶಿಕ್ಷಕರು ಸೇರಿಕೊಂಡು 6 ಮತ್ತು 7ನೇ ತರಗತಿಯ ಮಕ್ಕಳಿಗೆ ಸ್ವಾಗತ ಕೋರಿದರು.
ವಿದ್ಯಾಗಮಕ್ಕೆ ಚಾಲನೆ ನೀಡಲಾಯಿತು.
ಸುತ್ತಮುತ್ತಲಿನ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಕೂಡ ವಿದ್ಯಾಗಮ ತರಗತಿಗಳು ಆರಂಭವಾದವು.
ಹತ್ತನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ವೇಳಾ ಪಟ್ಟಿಯಂತೆ ಅರ್ಧದಿನ ಮಾತ್ರ ತರಗತಿ ನಡೆಸಲಾಗುತ್ತಿದೆ. ಒಂದು ಮೇಜಿಗೆ ಸುರಕ್ಷಿತ ಅಂತರ ಕಾಯ್ದುಕೊಂಡು ಇಬ್ಬರೇ ವಿದ್ಯಾರ್ಥಿಗಳು ಕುಳಿತುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ.