ಯಾದಗಿರಿ: ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾಗಿದೆ. ಇಂಥ ವೇಳೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮ ಯುವ ಸೌರಭದಲ್ಲಿ ಪಾಲ್ಗೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.
ಸುರಪುರ ತಾಲ್ಲೂಕಿನ ನಗನೂರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಮೆರವಣಿಗೆ ಮಾಡಿಕೊಂಡು ವೇದಿಕೆಗೆ ಕರೆತಂದು ಅವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟನೆ ಮಾಡಿಸಲಾಗಿದೆ.
ಚುನಾವಣೆಯ ನೀತಿ ಸಂಹಿತೆ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರೇ ಉಲ್ಲಂಘಿಸಿದರೆ ಹೇಗೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಕಾರ್ಯಕ್ರಮ ರದ್ದು ಮಾಡದೆ ಆಯೋಜಿಸಿದ್ದಾರೆ. ಇಲ್ಲಿ ಪೊಲೀಸ್ ಸಿಬ್ಬಂದಿಯೂ ಇದ್ದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪ್ರತಿಕ್ರಿಯಿಸಿ, ‘ಸಂಬಂಧಿಸಿದವರು ದೂರು ನೀಡಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.