ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಎಲ್ಲಾ ಅರ್ಹರಿಗೂ ಕೋವಿಡ್ ಲಸಿಕೆ ನೀಡಲು ಸಲಹೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೂಚನೆ
Last Updated 31 ಮಾರ್ಚ್ 2021, 16:38 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಸೂಚಿಸಲಾಗಿರುವ ವಿವಿಧ ವರ್ಗದ ಎಲ್ಲಾ ಅರ್ಹರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ಹಾಗೂ ಇನ್ನಿತರ ವಿಷಯಗಳ ಕುರಿತು ಬುಧವಾರನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಮೊದಲನೇ ಲಸಿಕೆ ಪಡೆದಿರುವ ಮುಂಚೂಣಿ ಕಾರ್ಯಕರ್ತರಾದ ವೈದ್ಯರು, ನರ್ಸ್, ಪೊಲೀಸರು ಮುಂತಾದವರು 2ನೇ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 10,803 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪ್ರಸಕ್ತ ಪ್ರತಿದಿನ 1,150 ಪ್ರಕರಣಗಳ ಪರೀಕ್ಷೆ ನಡೆಸುತ್ತಿದ್ದು, ಇನ್ಮುಂದೆ 1,500 ಪ್ರಕರಣಗಳ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ದಿನವೊಂದಕ್ಕೆ ಸರಾಸರಿ 5 ಸಾವಿರ ಕೋವಿಡ್ ಲಸಿಕೆ ಹಾಕುತ್ತಿರುವುದಕ್ಕೆ ಮೆಚ್ಚುಗೆಯ ಮಾತನಾಡಿದ ಮುಖ್ಯಕಾರ್ಯದರ್ಶಿ ರವಿಕುಮಾರ್, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಜಿಲ್ಲೆಯಲ್ಲಿ 37 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಗುರುಮಠಕಲ್ ತಾಲ್ಲೂಕಿನ ಯಂಪಾಡ್ ಹಾಗೂ ಸುಭಾಷ್ ನಗರದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. 32 ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಈ ಹಳ್ಳಿಗಳೂ ಸೇರಿವೆ. ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಪ್ರಾದೇಶಿಕ ಆಯುಕ್ತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ವಿವಿಧ ಸಾಲಿನಲ್ಲಿ ಕೈಗೊಂಡು ಮುಗಿಸಿರುವ ಕಾಮಗಾರಿಗಳ ವಿವರಗಳನ್ನು ಮಂಡಳಿಯ ಸಾಫ್ಟ್‌ವೇರ್‌ನಲ್ಲಿ ಅಪ್ಡೇಟ್ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖ್ಯ ಕಾರ್ಯದರ್ಶಿಪಿ.ರವಿಕುಮಾರ್ ಮಾತನಾಡಿ, ಇತ್ತೀಚಿನ ಸಾಲಿನ ನೂರಾರು ಕಾಮಗಾರಿಗಳನ್ನು ಇನ್ನೂ ಆರಂಭಿಸದಿರುವುದಕ್ಕೆ ವಿವಿಧ ಏಜೆನ್ಸಿಯ ಅಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವ ಮೂಲಕಜಿಲ್ಲೆಯ ಜನತೆ ಬೆಂಗಳೂರು ಮತ್ತಿತರೆಡೆ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದರು.

ಕಳೆದ ವರ್ಷ ಕೋವಿಡ್ ಸೋಂಕು ಇಡೀ ವರ್ಷ ಕಾಡಿದ್ದರಿಂದ ಅನುದಾನದ ಸಮಸ್ಯೆಯಾಗಿದ್ದು, 2021-22ನೇ ಸಾಲಿನಲ್ಲಿ ಯಾವುದೇ ಅನುದಾನದ ಕೊರತೆಯಾಗುವುದಿಲ್ಲ. 2021-22ನೇ ಸಾಲಿಗೆ ಸಂಬಂಧಿಸಿದಂತೆ ಎಲ್ಲಾ ಕ್ರಿಯಾ ಯೋಜನೆಗಳನ್ನು ಬೇಗ ಸಿದ್ಧಪಡಿಸಿ ಮಂಜೂರಾತಿಗೆ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ದೋರನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಬಿಟ್ಟರೆ, ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಶಾಂತಿಯುತವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಇದ್ದರು.

‘18 ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ’
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಮಾತನಾಡಿ, ಸುರಪುರ ನಗರದ 31 ವಾರ್ಡ್‍ಗಳ ಪೈಕಿ 18 ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಇದೆ. ₹240 ಕೋಟಿ ವೆಚ್ಚದಲ್ಲಿ ಶೆಳ್ಳಗಿ ಗ್ರಾಮದ ಕೃಷ್ಣಾ ನದಿಯಿಂದ ಪೈಪ್‍ಲೈನ್ ಮೂಲಕ ನೀರು ಹರಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಅಂತರ್ಜಲ ವೃದ್ಧಿಯಾಗಿದ್ದು, ಈ ವರ್ಷ ಅಷ್ಟೊಂದು ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಹೇಳಿದರು.

***
ಜಿಲ್ಲೆಯಾಗಿ 10 ವರ್ಷ ಪೂರೈಸಿದ್ದರೂ, ಇನ್ನು ಅಭಿವೃದ್ಧಿ ಕಂಡಿಲ್ಲ. ಅಧಿಕಾರಿಗಳು ಸ್ವಂತ ಜಿಲ್ಲೆ ಎಂಬ ಇಚ್ಛಾಶಕ್ತಿ ಪ್ರದರ್ಶಿಸಿ ಅಭಿವೃದ್ಧಿಗೆ ಶ್ರಮಿಸಿ
-ಪಿ.ರವಿಕುಮಾರ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT