ಯಾದಗಿರಿ: ಡಿಡಿಯು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಣ್ಣ ಮೇಟಿ ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಮೂಲಕ ಪಕ್ಷ ಸೇರ್ಪಡೆ ವಿಷಯ ಇತ್ಯರ್ಥಗೊಂಡಿದೆ.
ವಿಧಾನಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲಕಲ್, ಶಹಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಸಾಹು ಆರಬೋಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಕೊಡುವುದರ ಮೂಲಕ ಶಾಸಕರು ಪಕ್ಷಕ್ಕೆ ಬರಮಾಡಿಕೊಂಡರು.
ಶಾಸಕ ದರ್ಶನಾಪುರ ಮಾತನಾಡಿ, ಡಾ. ಭೀಮಣ್ಣ ಮೇಟಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರಿಂದ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಡಾ. ಭೀಮಣ್ಣ ಮೇಟಿ ಮಾತನಾಡಿ, ಮುಂಬರುವ ದಿನಗಳಲ್ಲಿ ಹಿರಿಯ ನಾಯಕರ ಮಾರ್ಗದಲ್ಲಿ ಪಕ್ಷ ಸಂಘಟನೆಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೆಲ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ಜಿಲ್ಲಾ ಕಾಂಗ್ರೆಸ್ ಒಪ್ಪದೇ ತಗಾದೆ ತೆಗೆದಿದ್ದರು. ಅಂದಿನಿಂದ ಪಕ್ಷದಲ್ಲಿದ್ದರೂ ಅಧಿಕೃತವಾಗಿ ಸದಸ್ವತ ಪಡೆದಿರಲಿಲ್ಲ ಎನ್ನಲಾಗಿದೆ. ಈಗ ಶಾಸಕರ ನೇತೃತ್ವದಲ್ಲಿ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಧುಮುಕಿದ್ದಾರೆ.
ಈ ವೇಳೆ ಹಿರಿಯ ನಾಯಕರಾದ ಶಿವಮಾಂತಪ್ಪ ಸಾಹು ಚಂದಾಪುರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಾನಸಿಂಗ್ ಚವಾಣ್ ಸೇರಿದಂತೆ ಕಾರ್ಯಕರ್ತರು ಇದ್ದರು.