ಯಾದಗಿರಿ: ಜಿಲ್ಲಾಡಳಿತ ಸಹಯೋಗದಲ್ಲಿ ಅಜೀಮ್ ಪ್ರೇಮ್ಜೀ ಫೌಂಡೆಷನ್ ತಯಾರಿಸಿದ ಆಹಾರಧಾನ್ಯದ ಕಿಟ್ಗಳನ್ನು ಪತ್ರಕರ್ತರಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿತರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಆಹಾರಧಾನ್ಯದ ಕಿಟ್ಗಳನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡಿ, ಸಾರ್ವಜನಿಕರಿಗೆ ಪರಿಣಾಮಕಾರಿ ವರದಿ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಕೋವಿಡ್–19 ಸಮರದಲ್ಲಿ ಪತ್ರಕರ್ತರ ಸೇವೆ ಅಮೋಘ ಮತ್ತು ಶ್ಲಾಘನೀಯ ಎಂದು ಹೇಳಿದರು.
ಈ ವೇಳೆ ಆಯುಷ್ ಇಲಾಖೆ ಸಿದ್ಧಪಡಿಸಿರುವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಔಷಧಗಳನ್ನು ಜಿಲ್ಲೆಯ ಅಧಿಕಾರಿಗಳಿಗೆ ಹಾಗೂ ಕೋವಿಡ್–19ರ ವಿರುದ್ಧ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ವಿತರಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಗಾಳಿ ಔಷಧಗಳ ಕುರಿತು ಮಾಹಿತಿ ನೀಡಿದರು.
ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ಶರಣಬಸಪ್ಪಗೌಡ ದರ್ಶನಾಪುರ, ಅಧಿಕಾರಿಗಳು ಇದ್ದರು.