ಯಾದಗಿರಿ: ನಗರದಲ್ಲಿ ಉತ್ತರ ಕರ್ನಾಟಕ ವಲಯ ಬಂಡವಾಳ ಅಭಿವೃದ್ಧಿ ಯೋಜನೆ ಮತ್ತು ಏಷಿಯನ್ ಬ್ಯಾಂಕ್ ನೆರವಿನಡಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ, ನಗರೋತ್ಥಾನ ಯೋಜನೆಯಡಿ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ, ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ್ ಮಂಗಳವಾರ ಪರಿಶೀಲಿಸಿದರು.
₨18.74 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನಗರ ಒಳಚರಂಡಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಈ ಕಾಮಗಾರಿಗಳನ್ನು 18 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕಾಗಿದ್ದು, ಈ ಕಾರ್ಯವನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಸೌಲಭ್ಯದಿಂದ ನಗರದ ಸುಮಾರು 13ಸಾವಿರ ಮನೆಗಳಿಗೆ ಅನುಕೂಲವಾಗಲಿದೆ. ಈ ಯೋಜನೆಯಿಂದ ಸುಮಾರು 76 ಸಾವಿರ ಜನರಿಗೆ ಸೌಲಭ್ಯ ಸಿಗಲಿದ್ದು, ನಗರದ ಸ್ವಚ್ಫತೆ ಹಾಗೂ ಸೌಂದರ್ಯಕ್ಕೆ ಸಹಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
₨3.75 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಲಾಜಿ ಮಂದಿರದಿಂದ ಪದವಿ ಕಾಲೇಜುವರೆಗಿನ ರಸ್ತೆ ಕಾಮಗಾರಿಗಳನ್ನು ಬರುವ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ನಗರೋತ್ಥಾನ ಯೋಜನೆಯಡಿ ₨1.75 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಣ್ಣ ನೀರಾವರಿ ಇಲಾಖೆ ಕಚೇರಿಯಿಂದ ಹೊಸಳ್ಳಿ ಕ್ರಾಸ್ವರೆಗಿನ ರಸ್ತೆ ಕಾಮಗಾರಿಯನ್ನು ಬರುವ ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಈ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು ಮೆಟಲಿಂಗ್, ಕಲ್ವರ್ಟ್ಗಳ ನಿರ್ಮಾಣ ಕಾರ್ಯ ಆಗಬೇಕಾಗಿದೆ. ಮಾರ್ಚ್ ಅಂತ್ಯದೊಳಗೆ ಈ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದರು.
ನಗರೋತ್ಥಾನ ಯೋಜನೆಯಡಿ ₨1.52 ಕೋಟಿ ವೆಚ್ಚದಲ್ಲಿ ಹೊಸಳ್ಳಿ ಕ್ರಾಸ್ನಿಂದ ಅಜೀಜ್ ಕಾಲೊನಿಯವರೆಗಿನ ರಸ್ತೆ ಮತ್ತು ರಸ್ತೆ ಬದಿಯ ಚರಂಡಿ ಕಾಮಗಾರಿಯನ್ನು ಮುಂದಿನ ಜುಲೈ ತಿಂಗಳಲ್ಲಿ ಪೂರ್ಣಗೊಳಿಸಬೇಕು. ನಗರದಲ್ಲಿ ₨12 ಕೋಟಿ ವೆಚ್ಚದಲ್ಲಿ ನಿರಂತರ ನೀರಿನ ಯೋಜನೆಯಡಿ ಹೈ ಡೆನ್ಸಿಟಿ ಪಾವರ್ ಕೊಳವೆ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಅನುದಾನದ ಲಭ್ಯತೆ ಆಧಾರದ ಮೇಲೆ ಆದ್ಯತೆ ಮೇಲೆ ಈ ಕಾಮಗಾರಿ ಪೂರ್ಣಗೊಳಿಸಬೇಕು. ನಗರದ ನೀರು ಶುದ್ಧೀಕರಣ ಘಟಕದ ಹತ್ತಿರದ ಉದ್ಯಾನದ ಗೇಟ್ ಅನ್ನು ಸಾರ್ವಜನಿಕರ ಅನುಕೂಲಕ್ಕೆ ತೆರೆದಿಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಫ್.ಆರ್.ಜಮಾದಾರ್, ನಗರದಲ್ಲಿ ಒಳಚರಂಡಿ ಯೋಜನೆ, ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಕುಷ್ಠರೋಗಿಗಳ ಕಾಲೊನಿಯಲ್ಲಿ ₨14 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಲ್ಲಿ ಸಂಪೂರ್ಣ ಸ್ವಚ್ಫತೆಗೂ ಸಹಕಾರಿಯಾಗಲಿದೆ. ಇತರೆ ಕಾಮಗಾರಿಗಳನ್ನು ಕೂಡ ಆದ್ಯತೆ ಮೇಲೆ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಕೋಶ, ನಗರಸಭೆ ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು ಹಾಜರಿದ್ದು, ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.