ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಚೇತನ ಯೋಜನೆ ಮುಂದಿನ ತಿಂಗಳ 1ರಿಂದ ಜಿಲ್ಲೆಯಲ್ಲಿ ಜಾರಿಗೆ ಬರಲಿದೆ. ಕೃಷಿ ಇಲಾಖೆ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಇಲ್ಲಿನ ಕೃಷಿ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಎಲ್.ಎನ್.ಬೆಳವಣಿಕೆ ಈ ವಿಷಯ ತಿಳಿಸಿದರು.
ಯೋಜನೆ ಕುರಿತು ಪ್ರಸ್ತಾಪಿಸಿದ ಅವರು, ಈ ಯೋಜನೆಯಡಿ ಜಿಲ್ಲೆಯ 71 ಸಾವಿರ ಹೆಕ್ಟೇರ್ನಷ್ಟು ಸಾಗುವಳಿ ಜಮೀನಿನ ಅಭಿವೃದ್ಧಿ ಹಾಗೂ ವಿವಿಧ ಬೆಳೆ ಬೆಳೆಯಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿ.ಪಂ.. ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಸೂಚಿಸಿದರು. ಜಿ.ಪಂ. ಉಪಾಧ್ಯಕ್ಷೆ ಡಾ.ಸೀತಾ ಜಿ.ಹಲಗೇರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಮುಖ್ಯ ಯೋಜನಾ ಅಧಿಕಾರಿ ಟಿ.ಪಿ.ದಂಡಿಗದಾಸರ ಹಾಗೂ ಇತರ ಅಧಿಕಾರಿಗಳು ಇದ್ದರು.