ಕೊಪ್ಪಳ: ಕಾನೂನು ಸಾಕ್ಷರತಾ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನದಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಎಸ್.ಶಿಂಧೆ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಬುಧವಾರ ಕಾನೂನು ಸಾಕ್ಷರತಾ ಮತ್ತು ಜನತಾ ನ್ಯಾಯಾಲಯ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದರು.
ಜಿಲ್ಲೆಯಲ್ಲಿ ಅ. 12ರ ವರೆಗೆ ಈ ವಾಹನ ಸಂಚರಿಸಲಿದೆ. ಈ ಉದ್ದೇಶಕ್ಕಾಗಿಯೇ ಬಸ್ ಅನ್ನು ವಿನೂತನವಾಗಿ ವಿನ್ಯಾಸಗೊಳಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಈ ಕಾರ್ಯ ಶ್ಲಾಘನೀಯ ಎಂದರು.
ಪ್ರಾಧಿಕಾರದ ಕಾರ್ಯದರ್ಶಿ, ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶ ಶಿವರಾಮ ಕೆ, ತ್ವರಿತ ನ್ಯಾಯಾಲಯದ ನ್ಯಾಯಾಧೀಶ ಎಲ್.ಬಿ.ಜಂಬಗಿ, ಸಿವಿಲ್ ನ್ಯಾಯಾಧೀಶೆ ಕಾವೇರಿ, ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಜರಿದ್ದರು.