ತರೀಕೆರೆ: ತಾಲ್ಲೂಕಿನಲ್ಲಿ ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸರ್ಕಾರ ಅಕ್ರಮವಾಗಿ ಸ್ವಾಧೀನ ಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಪಾದಿಸಿ ಭದ್ರಾ ಮೇಲ್ದಂಡೆ ವಿರೋಧಿ ಹೋರಾಟ ಸಮಿತಿ ಸದಸ್ಯರು ಶನಿವಾರ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪುರಸಭೆ ಮುಂಭಾಗದಿಂದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿದ ಪ್ರತಿಭಟನಾಕಾರರು ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಕೃತಿ ದಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಮಾತನಾಡಿದ ಪುರಸಭೆ ಅಧ್ಯಕ್ಷೆ ಹೇಮಲತಾ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ.ಕುಮಾರ್, ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ನೀಲಕಂಠಪ್ಪ ಮಾತನಾಡಿದರು. ತಾ.ಪಂ. ಸದಸ್ಯ ಅನ್ಬು, ಪುರಸಭಾ ಉಪಾಧ್ಯಕ್ಷೆ ಪಾರ್ವತಮ್ಮ ನಾಗರಾಜ್, ಸದಸ್ಯೆ ಜಯಮ್ಮ, ಮುಖಂಡರಾದ ಕೆ.ಆರ್.ಧ್ರುವಕುಮಾರ್, ನಂದಕುಮಾರ್, ಜಿ.ಎಚ್.ಶ್ರೀನಿವಾಸ್, ಸಮೀವುಲ್ಲಾ ಷರೀಫ್, ಕರಕುಚ್ಚು ಲಕ್ಷ್ಮಣ್, ಶಿವಮೂರ್ತಿ, ಎಲ್.ಟಿ.ಹೇಮಣ್ಣ, ಚಂದ್ರನಾಯ್ಕ, ಸರ್ವಮಂಗಳಮ್ಮ ಮತ್ತಿತರರಿದ್ದರು.