ಹುಬ್ಬಳ್ಳಿ: `ಮಂಗಳೂರು ಹೋಂ ಸ್ಟೇ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ವರದಿ ನೀಡಿ, ಘಟನೆ ಸಮರ್ಥಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಅವರನ್ನು ತಕ್ಷಣ ವಜಾಗೊಳಿಸಬೇಕು~ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
`ಪ್ರಕರಣದ ತನಿಖೆ ನಡೆಸಿದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ, ಘಟನಾ ಸ್ಥಳದಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ. ಪಾರ್ಟಿಯಲ್ಲಿ ಭಾಗವಹಿಸಿದವರು ಗಾಂಜಾ ಸೇವಿಸಿದ್ದರೆಂಬ ಉಲ್ಲೇಖವೂ ಇಲ್ಲ ಎಂದು ಹೇಳಿದ್ದಾರೆ. ಆದರೆ ಮಂಜುಳಾ ಅದಕ್ಕೆ ವ್ಯತಿರಿಕ್ತ ವರದಿ ನೀಡಿದ್ದಾರೆ~ ಎಂದು ದೂರಿದರು.
`ದಾಳಿ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೊಬ್ಬರನ್ನು ನೇಮಿಸಿ ತನಿಖೆ ನಡೆಸಬೇಕು. ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪಿಸಿ ಈ ಪ್ರಕರಣವನ್ನು ಶೀಘ್ರ ವಿಚಾರಣೆಗೆ ಒಳಪಡಿಸಬೇಕು~ ಎಂದು ಅವರು ಒತ್ತಾಯಿಸಿದರು.