ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾಲಾಲ್ ಜನ್ಮಸ್ಥಳ ಅಭಿವೃದ್ಧಿಗೆ ನೆರವು

Last Updated 15 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಹೊನ್ನಾಳಿ: ಸಂತ ಶ್ರೀ ಸೇವಾಲಾಲ್ ಅವರ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ, ಶೌಚಾಲಯ, ಸ್ನಾನಗೃಹ, ವಸತಿಗೃಹ ನಿರ್ಮಾಣಕ್ಕೆ ರೂ 5 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸೇವಾಲಾಲ್ ಮಹಾರಾಜರ 272ನೇ ಜಯಂತ್ಯುತ್ಸವ ಹಾಗೂ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಅಧಿಕಾರ ನಡೆಸಿದವರು ಬಂಜಾರ ಜನಾಂಗವನ್ನು ಕೇವಲ ಮತಕ್ಕಾಗಿ ಬಳಸಿಕೊಂಡರು. ಆದರೆ, ಬಿ.ಎಸ್. ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆದ ಮೇಲೆ ಸೂರಗೊಂಡನಕೊಪ್ಪದ ಸಮಗ್ರ ಅಭಿವೃದ್ಧಿಗೆ ಮುಂದಾದರು. ನಂತರ ಮುಖ್ಯಮಂತ್ರಿ ಆದ ಮೇಲೆ ರಾಜಕೀಯವಾಗಿ ಬಂಜಾರ ಜನಾಂಗಕ್ಕೆ ಅನೇಕ ಅವಕಾಶ ಕಲ್ಪಿಸಿಕೊಟ್ಟರು ಎಂದರು.

ರಾಜ್ಯದಲ್ಲಿನ 2,500 ತಾಂಡಾಗಳನ್ನು ಮುಖ್ಯಮಂತ್ರಿ ಅವರು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಬಂಜಾರ ಸಮುದಾಯ ಭವನ, ಬೆಂಗಳೂರಿನಲ್ಲಿ ರಾಜ್ಯಮಟ್ಟದ ಭವ್ಯ ಬಂಜಾರ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದ ಅವರು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ, ಸಂಸದರಾದ ಬಿ.ವೈ. ರಾಘವೇಂದ್ರ, ಜಿ.ಎಂ. ಸಿದ್ದೇಶ್ವರ ಅವರೊಂದಿಗೆ ತಾವೂ ಸೇರಿ ಬಂಜಾರ ಜನಾಂಗದ ಅಭಿವೃದ್ಧಿಗೆ ದುಡಿಯುವುದಾಗಿ ಭರವಸೆ ನೀಡಿದರು.

ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮೀಜಿ, ನೇಮಿರಾಜನಾಯ್ಕ, ಚೂಡಾನಾಯ್ಕ, ಬಸವರಾಜನಾಯ್ಕ ಇತರರು ಉಪಸ್ಥಿತರಿದ್ದರು.
ಗದಗಿನ ಸಾವಿತ್ರಬಾಯಿ ತಂಬೂರಿ ಪ್ರಾರ್ಥಿಸಿದರು. ಶಿವರಾಮನಾಯ್ಕ ಸ್ವಾಗತಿಸಿದರು. ರಮೇಶ್ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಮಲ್ಲೇಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT