ಬೆಂಗಳೂರು: ರಾಜ್ಯದಲ್ಲಿ 1ರಿಂದ 9ನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನಡೆಸಬೇಕೆ, ಬೇಡವೇ ಎಂಬ ಬಗ್ಗೆ ಚರ್ಚಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.
ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ತರಗತಿಗಳಿಗೆ ಲಿಖಿತ ಪರೀಕ್ಷೆ ನಡೆಸದಿರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಲಿಖಿತ ಪರೀಕ್ಷೆ ಬದಲು ಮೌಲ್ಯಾಂಕನ ಪರೀಕ್ಷೆ ನಡೆಸಿ ಮುಂದಿನ ತರಗತಿಗೆ ತೇರ್ಗಡೆ ನೀಡುವ ಬಗ್ಗೆ ಸೋಮವಾರದ ಸಭೆಯಲ್ಲಿ ಚರ್ಚೆಯಾಗಲಿದೆ. ಮೌಲ್ಯಾಂಕನ ಯಾವ ರೀತಿ ಮಾಡಬೇಕು? ಒಂದೆರಡು ದಿನ ಮಕ್ಕಳನ್ನು ಶಾಲೆಗೆ ಕರೆಸಿ ಅವರಿಗೆ ಪ್ರಶ್ನೆಗಳನ್ನು ಕೇಳಿ ಅವರ ಕಲಿಕಾ ಸಾಮರ್ಥ್ಯ ಅಳೆಯಬೇಕಾ ಎಂಬ ವಿಚಾರಗಳು ಚರ್ಚೆಯಾಗಲಿವೆ.
ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆಯೇ ಆರಂಭವಾಗದ ಕಾರಣ ಮೌಲ್ಯಾಂಕನವೂ ಅಗತ್ಯವಿಲ್ಲ ಎಂಬ ಅಭಿಪ್ರಾಯವೂ ಸರ್ಕಾರದ ಮುಂದಿದೆ.