ಬೆಂಗಳೂರು: ನಾನಾ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ರಾಜ್ಯದಲ್ಲಿ ಗುರುವಾರ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಆರಂಭವಾಗಿದ್ದು, ಮೊದಲ ದಿನ ಸುಗಮವಾಗಿನಡೆಯಿತು.
ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,08,032 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದರು. ಒಟ್ಟು 2,16,559 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.
ಶುಕ್ರವಾರ ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಶನಿವಾರ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ ಆರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
‘ವೃತ್ತಿಪರ ಕೋರ್ಸ್ಗಳಿಗೆ ನಡೆಸುತ್ತಿರುವ ಸಿಇಟಿ ಗುರುವಾರ ಸುಗಮವಾಗಿ ನಡೆದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪರೀಕ್ಷೆಗೆ ಸಂಪೂರ್ಣ ಕ್ಯಾಮೆರಾ ಕಣ್ಗಾವಲಿತ್ತು. ವಿಡಿಯೊ ಚಿತ್ರೀಕರಣ ಮಾಡಲಾಯಿತು. ಅಕ್ರಮ ನಡೆಯದಂತೆ ತೀವ್ರ ನಿಗಾ ವಹಿಸಲಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಹಾಯಕ ಆಯುಕ್ತ ದರ್ಜೆಯ ಅಧಿಕಾರಿಯನ್ನು ಪರೀಕ್ಷಾ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.