ಉಡುಪಿ: ರಾಜ್ಯದಲ್ಲಿನಿಗದಿಯಾದ ದಿನಾಂಕದಂದೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ಕೂಡ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಜತೆಗೆ ಕೆಲವು ಸೂಚನೆಗಳನ್ನೂ ನೀಡಿದೆ. ಅದನ್ನು ಅನುಸರಿಸಿಯೇ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ತಮಿಳುನಾಡು ಸರ್ಕಾರ ಸಹ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪಾಲಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಪುನರ್ಮನನ ಕಾರ್ಯಕ್ರಮ ಆಯೋಜಿಸಲಾಗುವುದು.ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುವೆ ಎಂದು ತಿಳಿಸಿದರು.
ರಾಜ್ಯದಲ್ಲಿ ತರಾತುರಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಮಾಹಿತಿ ನೀಡಿದರು.