ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ಷೇತ್ರ ಮಹಾತ್ಮೆ: ಝಾನ್ಸಿ (ಉತ್ತರ ಪ್ರದೇಶ)

Published 18 ಮೇ 2024, 15:31 IST
Last Updated 18 ಮೇ 2024, 15:31 IST
ಅಕ್ಷರ ಗಾತ್ರ

ಉತ್ತರ ಪ್ರದೇಶದ ಝಾನ್ಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಕದನ ಕಲಿಗಳ ಹೋರಾಟಕ್ಕೆ ವೇದಿಕೆ ಸಿದ್ಧಗೊಂಡಿದೆ. ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ಅನುರಾಗ್‌ ಶರ್ಮಾ ಅವರನ್ನೇ ಬಿಜೆಪಿಯು ಮತ್ತೆ ಕಣಕ್ಕಿಳಿಸಿದೆ. ಕಾಂಗ್ರೆಸ್‌ ಪಕ್ಷವು ಮಾಜಿ ಕೇಂದ್ರ ಸಚಿವ ಪ್ರದೀಪ್‌ ಜೈನ್‌ ಅವರನ್ನು ಅಖಾಡಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ಅನುರಾಗ್‌ ಶರ್ಮಾ ಅವರು 3,65,683 ಮತಗಳ ಅಂತರದಿಂದ ಸಮಾಜವಾದಿ ಪಕ್ಷದ ಶ್ಯಾಮ್‌ ಸುಂದರ್‌ ಸಿಂಗ್‌ ಯಾದವ್‌ ಅವರನ್ನು ಪರಾಭವಗೊಳಿಸಿದ್ದರು. ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಪ್ರದೀಪ್‌ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. ಸಮಾಜವಾದಿ ಪಕ್ಷವು ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಈ ಬಾರಿ ಆ ಮತಗಳು ಕಾಂಗ್ರೆಸ್‌ ಅಭ್ಯರ್ಥಿಯ ಪಾಲಾಗುವ ಸಾಧ್ಯತೆ ಇದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ ನಿರ್ಮಾಣ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನರ ಮುಂದಿರಿಸಿ ಅನುರಾಗ್‌ ಶರ್ಮಾ ಅವರು ಮತ ಯಾಚಿಸುತ್ತಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನೇ ಪ್ರದೀಪ್‌ ಅವರು ಮುಖ್ಯ ಚುನಾವಣಾ ವಿಷಯವಾಗಿಸಿದ್ದಾರೆ. ಇಬ್ಬರು ಪ್ರಬಲ ಅಭ್ಯರ್ಥಿಗಳು ಕಣಕ್ಕಿಳಿದಿರುವ ಈ ಕ್ಷೇತ್ರದಲ್ಲಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT