ಆನೇಕಲ್ : ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ಚುನಾವಣೆ ಗೆಲುವಿಗೆ ಶ್ರೀರಕ್ಷೆ ಎಂದು ಪುರಸಭಾ ಅಧ್ಯಕ್ಷ ಪಿ.ಶಂಕರ್ ಕುಮಾರ್ ತಿಳಿಸಿದರು.
ಅವರು ಪಟ್ಟಣದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿ ಮಾತನಾಡಿದರು.
ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಬಿ.ಶಿವಣ್ಣ ಅವರು ಕಳೆದ ಐದು ವರ್ಷಗಳಲ್ಲಿ ₹1ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಕ್ಷೇತ್ರಕ್ಕೆ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪಟ್ಟಣಕ್ಕೆ ಕಾವೇರಿ ಕುಡಿಯುವ ನೀರು ಪೂರೈಕೆ ಸೇರಿದಂತೆ ಮಹತ್ತರ ಯೋಜನೆ ಜಾರಿಗೊಳಿಸಿದ್ದಾರೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಹಾಗಾಗಿ ಕ್ಷೇತ್ರದ ಜನರು ಅಭಿವೃದ್ದಿ ಪರವಾಗಿ ಮತಚಲಾಯಿಸಲಿದ್ದು ಹೆಚ್ಚಿನ ಬಹುಮತದಿಂದ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸುವುದು ಖಚಿತ ಎಂದರು.
ಪುರಸಭಾ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಎನ್.ಎಸ್.ಪದ್ಮನಾಭ ಮಾತನಾಡಿ, ರಸ್ತೆಗಳ ಅಭಿವೃದ್ಧಿ, ಉದ್ಯಾನ, ಪುರಸಭೆಯ ವತಿಯಿಂದ ಕಾವೇರಿ ನೀರು, ಜಲಸಂಗ್ರಹಾಗಾರ ಸ್ಥಾಪನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಎಲ್ಲಾ ಕಾರ್ಯಗಳಿಗೂ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಬಿ.ಶಿವಣ್ಣ ಅವರು ಬೆಂಬಲ ನೀಡಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಿದ್ದಾರೆ ಎಂದರು.
ಟೌನ್ ಕಾಂಗ್ರೆಸ್ ಅಧ್ಯಕ್ಷ ಜಿ.ಗೋಪಾಲ್ ಮಾತನಾಡಿ, ಆನೇಕಲ್ ವಿಧಾನಸಭಾ ಕ್ಷೇತ್ರದಾದ್ಯಂತ ಡಿ.ಕೆ.ಸುರೇಶ್ ಅವರ ಪರವಾದ ಅಲೆಯಿದ್ದು ಕನಿಷ್ಠ 50ಸಾವಿರಕ್ಕೂ ಹೆಚ್ಚಿನ ಲೀಡ್ ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಸಿಗಲಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಸಲುವಾಗಿ ಏಪ್ರಿಲ್ 4ರಂದು ಆನೇಕಲ್ನಲ್ಲಿ ರೋಡ್ ಷೋ ನಡೆಯಲಿದ್ದು ಅಭ್ಯರ್ಥಿ ಡಿ.ಕೆ.ಸುರೇಶ್, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಬಿ.ಶಿವಣ್ಣ, ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಮುಖಂಡರು ರೋಡ್ ಷೋನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪುರಸಭಾ ಸದಸ್ಯರಾದ ಮಲ್ಲಿಕಾರ್ಜುನ್, ಮುನಾವರ್, ಕರ್ಪೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಪಿ.ರಮೇಶ್, ಮುಖಂಡರಾದ ಮುರಳಿ, ಶ್ರೀನಿವಾಸ್, ಶೈಲೇಂದ್ರಕುಮಾರ್, ಬೆಸ್ತಮಾನಹಳ್ಳಿ ಯಲ್ಲಪ್ಪ, ಲೋಕೇಶ್ಗೌಡ, ಗಣೇಶ್, ಮಲ್ಲಿಕಾರ್ಜುನ್ ಗೌಡ, ಅರೇಹಳ್ಳಿ ಮಧು, ಕೃಷ್ಣಪ್ಪ, ವೆಂಕಟೇಶ್, ಜಿ.ಆರ್.ಶಿವಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.