ರತ್ನಗಿರಿ–ಸಿಂಧುದುರ್ಗ ಲೋಕಸಭಾ ಕ್ಷೇತ್ರದಿಂದ ಕಳೆದೆರಡು ಚುನಾವಣೆಗಳಲ್ಲಿ ಗೆದ್ದಿದ್ದ ವಿನಾಯಕ ರಾವುತ್ ಅವರನ್ನೇ ಶಿವಸೇನಾ ಉದ್ಧವ್ ಠಾಕ್ರೆ ಬಣವು ಈ ಬಾರಿ ಕಣಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ವಿನಾಯಕ ಅವರು 1,78,322 ಮತಗಳ ಅಂತರದಿಂದ ಮಹಾರಾಷ್ಟ್ರ ಸ್ವಾಭಿಮಾನ ಪಕ್ಷದಿಂದ ಸ್ಪರ್ಧಿಸಿದ್ದ ನಿಲೇಶ್ ರಾಣೆ ಅವರನ್ನು ಪರಾಭವಗೊಳಿಸಿದ್ದರು. ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ವಿನಾಯಕ ಅವರು ಈ ಹಿಂದೆ ವಿಲೇಪಾರ್ಲೆ ಕ್ಷೇತ್ರದ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಮಹಾರಾಷ್ಟ್ರದ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಶಿವಸೇನಾ ಉದ್ಧವ್ ಠಾಕ್ರೆ ಬಣವು ‘ಇಂಡಿಯಾ’ ಒಕ್ಕೂಟದ ಜೊತೆಗಿರುವುದು ವಿನಾಯಕ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. ಶಿವಸೇನಾವು ಇಬ್ಭಾಗವಾಗಿರುವುದರಿಂದ ಕ್ಷೇತ್ರದ ಜನರು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.