ಬೀಕಾನೆರ್ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ ವಿರುದ್ಧ ಸೆಣಸಲು ಕಾಂಗ್ರೆಸ್, ಗೋವಿಂದ ರಾಮ್ ಮೇಘವಾಲ್ ಅವರನ್ನು ಅಖಾಡಕ್ಕಿಳಿಸಿದೆ. ರಾಜ್ಯ ಸಚಿವರಾಗಿ ಅನುಭವವಿರುವ ಗೋವಿಂದ ರಾಮ್ ಅವರು ಕೂಡ ಈ ಕ್ಷೇತ್ರದ ಮತದಾರರಿಗೆ ಚಿರಪರಿಚಿತರು. ಈ ಬಾರಿಯಾದರೂ ಬಿಜೆಪಿ ಅಭ್ಯರ್ಥಿಯ ಗೆಲುವಿನ ಓಟಕ್ಕೆ ಕಡಿವಾಣ ಹಾಕಬೇಕೆಂದು ಕಾಂಗ್ರೆಸ್, 62 ವರ್ಷದ ಅವರನ್ನು ಅಭ್ಯರ್ಥಿಯನ್ನಾಗಿಸಿದೆ. 2009ರಲ್ಲಿ ಇದೇ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು, ಅರ್ಜುನ್ ರಾಮ್ ವಿರುದ್ಧ ಪರಾಭವಗೊಂಡಿದ್ದರು. ಅನಂತರ ಬಿಎಸ್ಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. ಪಕ್ಷದ ರಾಜಸ್ಥಾನ ಘಟಕದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಗೋವಿಂದ ರಾಮ್ ಅವರನ್ನು ಕಣಕ್ಕಿಳಿಸಿರುವುದರಿಂದ ಈ ಕ್ಷೇತ್ರವು ನೇರ ಹಣಾಹಣಿಗೆ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.