ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ: ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ವೈ.ಎಸ್‌ ಶರ್ಮಿಳಾ ಚಾಲನೆ

Published 5 ಏಪ್ರಿಲ್ 2024, 13:26 IST
Last Updated 5 ಏಪ್ರಿಲ್ 2024, 13:26 IST
ಅಕ್ಷರ ಗಾತ್ರ

ಕಡಪ (ಆಂಧ್ರಪ್ರದೇಶ): ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷೆ ವೈ. ಎಸ್ ಶರ್ಮಿಳಾ ಅವರು ಬದ್ವೇಲ್ ಕ್ಷೇತ್ರದ ಅಮಗಂಪಲ್ಲಿಯಿಂದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸಿದ್ದಾರೆ.

ಚುನಾವಣಾ ಪ್ರಚಾರದ ಅಂಗವಾಗಿ, ಶರ್ಮಿಳಾ ಅವರು ಮೊದಲ ದಿನ ಇಟುಕುಲಪಾಡು, ವಾರಿಕುಂಟ್ಲ, ಕಳಸಪಾಡು, ಪೌರ್ಮಾಮಿಲ, ಪಾಯಲಕುಂಟ್ಲ ಮತ್ತಿತರ ಗ್ರಾಮಗಳಲ್ಲಿ ಸಂಚರಿಸಿ, ಸರಣಿ ಭಾಷಣ ಮಾಡಿ ರಾತ್ರಿ 10 ಗಂಟೆ ಸುಮಾರಿಗೆ ಅಟ್ಲೂರಿನಲ್ಲಿ ತಮ್ಮ ದಿನದ ಪ್ರಚಾರವನ್ನು ಮುಕ್ತಾಯಗೊಳಿಸಲಿದ್ದಾರೆ.

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶರ್ಮಿಳಾ, ‘ವೈ. ಎಸ್‌. ರಾಜಶೇಖರ್‌ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಲವು ಉತ್ತಮ ಕಾರ್ಯಗಳನ್ನು ಮಾಡಿದರು. ಆದರೆ, ಈಗ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರು ರಾಜ್ಯವನ್ನು ಬಿಜೆಪಿಗೆ ಒತ್ತೆ ಇಟ್ಟಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಡಪ ಲೋಕಸಭಾ ಕ್ಷೇತ್ರದಿಂದ ನಾನು ಕಣಕ್ಕಿಳಿಯಲು ವೈಎಸ್‌ಆರ್‌ಸಿಪಿ ಮುಖ್ಯಸ್ಥ, ಮುಖ್ಯಮಂತ್ರಿ ವೈ. ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ಕಾರಣ ಎಂದು ಶರ್ಮಿಳಾ ಹೇಳಿದ್ದಾರೆ.

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲಿದೆ. ಜಗನ್‌ ಮೋಹನ್‌ ರೆಡ್ಡಿ ಅವರು ಬಿಜೆಪಿಯ ಗುಲಾಮರಾಗಿದ್ದಾರೆ’ ಎಂದು ಅವರು ಟೀಕಿಸಿದ್ದಾರೆ.

ಏತನ್ಮಧ್ಯೆ, ಇತ್ತೀಚೆಗೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ತೊರೆದಿದ್ದ ಮಾಜಿ ಕೇಂದ್ರ ಸಚಿವ ಕೆ. ಕೃಪಾರಾಣಿ ಅವರು ಎಪಿಸಿಸಿ ಮುಖ್ಯಸ್ಥರು ಮತ್ತು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಆಂಧ್ರಪ್ರದೇಶದ 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭೆ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT