ಹೈದರಾಬಾದ್: ತೆಲಗಾಣದಲ್ಲಿ ಕಾಂಗ್ರೆಸ್ ಪಕ್ಷವು 10 ರಿಂದ 17 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕೇಂದ್ರದಲ್ಲಿ ‘ಇಂಡಿಯಾ’ಬಣ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ.
‘ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ನಮ್ಮ ಪಕ್ಷವು ಅದೇ ಸಂಖ್ಯೆಗಳನ್ನು ಉಳಿಸಿಕೊಳ್ಳಲಿದ್ದು, ಉತ್ತರ ಪ್ರದೇಶದಲ್ಲಿ ನಮ್ಮ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶದಲ್ಲಿ ನಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದೇವೆ. ಪಶ್ಚಿಮ ಬಂಗಾಳದಲ್ಲಿ 18 ಕ್ಷೇತ್ರಗಳಲ್ಲಿ ನಮ್ಮ ಸಂಸದರಿದ್ದು, ಅದು 30ಕ್ಕೆ ಏರಲಿದೆ. ಹತ್ತಿರತ್ತಿರ ನಮ್ಮ ಸ್ಥಾನಗಳ ಸಂಖ್ಯೆ ಡಬಲ್ ಆಗಲಿದೆ. ಒಡಿಶಾದ 21 ಕ್ಷೇತ್ರಗಳ ಪೈಕಿ ನಾವು 18 ಗೆಲ್ಲುತ್ತೇವೆ. ತೆಲಂಗಾಣದಲ್ಲಿ 4–5 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ’ ಎಂದು ಎಕ್ಸ್ನಲ್ಲಿ ಬಿಜೆಪಿ ಪೋಸ್ಟ್ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
4–5 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಬಿಜೆಪಿ ಹೇಳುತ್ತಿದೆ. ಹಾಗಾದರೆ, ಬಿಆರ್ಎಸ್ ಒಂದಕ್ಕಿಂತ ಹೆಚ್ಚು ಗೆಲ್ಲುವುದಿಲ್ಲ. ಎಐಎಂಐಎಂ ಹೈದರಾಬಾದ್ ಅನ್ನು ಉಳಿಸಿಕೊಳ್ಳಬಹುದು. ಉ:ಳಿದ ಕನಿಷ್ಠ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ತಮಿಳುನಾಡು ಮತ್ತು ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಇಂಡಿಯಾ ಬಣ ಹೆಚ್ಚು ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರದಲ್ಲಿ ‘ಇಂಡಿಯಾ’ಬಣ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ. ಬಿಜೆಪಿ 240 ಅನ್ನು ದಾಟುವುದಿಲ್ಲ ಎಂದಿದ್ದಾರೆ.
ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ತೆಲಂಗಾಣಕ್ಕೆ ಕೇಂದ್ರ ಸಂಪುಟದಲ್ಲಿ ಪ್ರಮುಖ ಖಾತೆಗೆ ಬೇಡಿಕೆ ಇಡುವುದಾಗಿ ಅವರು ಹೇಳಿದ್ದಾರೆ.