ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿರುವ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಒಟ್ಟು 1,198 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಕಣದಲ್ಲಿರುವ ಪ್ರತಿ ಏಳು ಅಭ್ಯರ್ಥಿಗಳಲ್ಲಿ ಒಬ್ಬರು ಗಂಭೀರ ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ. ಪ್ರತಿ ಮೂವರಲ್ಲಿ ಒಬ್ಬರು ಕೋಟ್ಯಧಿಪತಿ ಆಗಿದ್ದಾರೆ ಎಂಬುದನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ಹೇಳಿದೆ.
ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಮಾಹಿತಿಯನ್ನು ವರದಿ ಒಳಗೊಂಡಿದೆ. 167 ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಮೂವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಕಣದಲ್ಲಿರುವ ಶ್ರೀಮಂತ ಅಭ್ಯರ್ಥಿಗಳಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಕರ್ನಾಟಕದವರೇ ಇದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಶ್ರೀಮಂತ ಅಭ್ಯರ್ಥಿ ಎನಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ಎರಡನೇ ಹಂತದ ಮತದಾನ ಏ.26 ರಂದು ನಡೆಯಲಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ.