ಧರ್ಮಾವರಂ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು 400 ಸ್ಥಾನಗಳತ್ತ ಮುಂದುವರೆಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಪಕ್ಷವು 100 ಸ್ಥಾನಗಳನ್ನು ದಾಟಿದೆ ಎಂದು ಅವರು ಅಭಿಪ್ರಾಯಪಟ್ಟರು.
‘ಇಂಡಿಯಾ’ ಕೂಟದ ಬಗ್ಗೆ ಲೇವಡಿ ಮಾಡಿದ ಅವರು, ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಕೂಟದ ಯಾವ ನಾಯಕನೂ ದೇಶವನ್ನು ಮುನ್ನಡೆಸಲು ಅರ್ಹರಲ್ಲ. ಇಡೀ ದೇಶ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.
ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂನಲ್ಲಿ ಚುನಾವಣಾ ರ್ಯಾಲಿ ನಡೆಸಿದ ಅವರು, ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಭ್ರಷ್ಟಾಚಾರ ಮತ್ತು ಅಪರಾಧಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.
ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮತ್ತು ಕೇಂದ್ರದಲ್ಲಿ ಮೋದಿ ಅವರನ್ನು ಅಧಿಕಾರಕ್ಕೆ ತಂದರೆ, ರಾಜ್ಯದ ಜನರ ಮಹತ್ವಾಕಾಂಕ್ಷೆಯ ಪೋಲವರಂ ಯೋಜನೆಯನ್ನು ಎರಡು ವರ್ಷದಲ್ಲಿ ಮುಗಿಸುವುದಾಗಿ ಭರವಸೆ ನೀಡಿದರು.