ನವದೆಹಲಿ: ಲೋಕಸಭೆಗೆ ನಡೆಯುತ್ತಿರುವ 6ನೇ ಹಂತದ ಮತದಾನದ ವೇಳೆ ಚಾಂದ್ನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ ಚಲಾಯಿಸಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಅವರು, ಸರ್ವಾಧಿಕಾರ, ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಅವರು ತಮ್ಮ ಕುಟುಂಬ ಸಮೇತ ಬಂದು ಮತದಾನ ಮಾಡಿದ್ದಾರೆ. ಪತ್ನಿ ಸುನೀತಾ ಕೇಜ್ರಿವಾಲ್ ಜೊತೆಗಿದ್ದರು.
'ನಾನು ಸರ್ವಾಧಿಕಾರ, ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಮತ ಚಲಾಯಿಸಿದ್ದೇನೆ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಕೇಜ್ರಿವಾಲ್ ಅವರಿಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.