ಲಖನೌ, ಅಮೇಠಿ: ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಅವರು ಕ್ರಮವಾಗಿ ಲಖನೌ ಮತ್ತು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದರು.
ರಾಜನಾಥ್ ಅವರು ನಾಮಪತ್ರ ಸಲ್ಲಿಸುವಾಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಜತೆಗಿದ್ದರು. ದಕ್ಷಿಣ ಮುಖಿ ಹನುಮಾನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅವರು ಬಿಜೆಪಿ ಕೇಂದ್ರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದರು. ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡರು.
ಲಖನೌ ಕ್ಷೇತ್ರದಿಂದ ಎರಡು ಸಲ ಗೆದ್ದಿರುವ ರಾಜನಾಥ್, ‘ಹ್ಯಾಟ್ರಿಕ್’ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಸ್ಮೃತಿ ಅವರು ಅಮೇಠಿಯಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡು ನಾಮಪತ್ರ ಸಲ್ಲಿಸಿದರು. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ಇತರ ನಾಯಕರು ಜತೆಗಿದ್ದರು. ಉತ್ತರ ಪ್ರದೇಶದ ಸಚಿವ ಮಯಾಂಕೇಶ್ವರ್ ಶರಣ್ ಸಿಂಗ್ ಮತ್ತು ಇರಾನಿ ಅವರ ಪತಿ ಜುಬಿನ್ ಇರಾನಿ, ರೋಡ್ ಶೋದಲ್ಲಿ ಪಾಲ್ಗೊಂಡರು.
ಗಾಂಧಿ ಕುಟುಂಬದ ಭದ್ರಕೋಟೆ ಎನಿಸಿದ್ದ ಅಮೇಠಿಯಲ್ಲಿ 2019ರ ಚುನಾವಣೆಯಲ್ಲಿ ಸ್ಮೃತಿ ಅವರು ರಾಹುಲ್ ಗಾಂಧಿ ಅವರನ್ನು ಮಣಿಸಿದ್ದರು. ಲಖನೌ ಮತ್ತು ಅಮೇಠಿ ಕ್ಷೇತ್ರಗಳಲ್ಲಿ ಮೇ 20 ರಂದು ಮತದಾನ ನಡೆಯಲಿದೆ.