ಪಟ್ನಾ: ಪ್ರಧಾನಿ ಅವರನ್ನು ಗುರಿಯಾಗಿಸಿ ನಾನು ಯಾವುದೇ ಹೇಳಿಕೆ ನೀಡಿಲ್ಲ, ಅವರ ಕುರಿತಾದ ತಮ್ಮ ಹೇಳಿಕೆಯನ್ನ ತಿರುಚಲಾಗಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮೀಸಾ ಭಾರತಿ ಶುಕ್ರವಾರ ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರ ಜೈಲು ಸೇರಲಿದ್ದಾರೆ ಎಂದು ಮೀಸಾ ಅವರು ಹೇಳಿದ್ದಾಗಿ ವರದಿಯಾಗಿತ್ತು. ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅವರು ಈಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.
ಪ್ರಧಾನಿ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಮಾಧ್ಯಮಗಳು ನನ್ನ ಪೂರ್ಣ ಹೇಳಿಕೆಯನ್ನು ಪ್ರಸಾರ ಮಾಡದೆ, ತಿರುಚಿದ ತುಣಕನ್ನು ಮಾತ್ರ ಬಿತ್ತರಿಸಿವೆ. ಅದು ಬಿಜೆಪಿಯ ಕಾರ್ಯಸೂಚಿ’ ಎಂದು ಮೀಸಾ ಅವರು ಸ್ಪಷ್ಟನೆ ನೀಡಿದ್ದಾರೆ.
ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬಗ್ಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.