ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಮೊದಲ ಬಾರಿ ಲೋಕಸಭಾ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಅದೂ ಪ್ರಬಲ ಅಭ್ಯರ್ಥಿಯಾಗಿರುವ ಶಶಿ ತರೂರ್ ವಿರುದ್ಧ. ಮೂಲತಃ ಕೇರಳದವರಾದರೂ ರಾಜೀವ್ ಅವರು ಕರ್ನಾಟಕ ಮತ್ತು ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಛಾಪು ಮೂಡಿಸಿದವರು. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಅವರು ಈ ಹಿಂದೆ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ತಿರುವನಂತಪುರ ಕ್ಷೇತ್ರದಲ್ಲಿ ಗೆಲುವಿನ ಸಾಧ್ಯತೆ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿದೆ ಎಂಬುದು ಸ್ಪಷ್ಟವಿದ್ದರೂ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಮಣಿದು ಇವರು ಸ್ಪರ್ಧಾ ಕಣಕ್ಕಿಳಿದಿದ್ದಾರೆ. ರಾಜಕಾರಣದ ಜೊತೆಗೆ ಉದ್ಯಮಿಯಾಗಿಯೂ ಪ್ರಸಿದ್ಧರಾಗಿರುವ 59 ವರ್ಷದ ಚಂದ್ರಶೇಖರ್ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ಸ್ಪರ್ಧೆ ಮಹತ್ವದ್ದು ಎಂದು ವಿಶ್ಲೇಷಿಸಲಾಗಿದೆ. ತಂತ್ರಜ್ಞಾನ ಮತ್ತು ಉದ್ಯಮ ಕ್ಷೇತ್ರದ ಹಿನ್ನೆಲೆಯ ರಾಜೀವ್ ಅವರು ಕೇಂದ್ರ ಸರ್ಕಾದ ‘ಡಿಜಿಟಲ್ ಇಂಡಿಯಾ’ ಅಭಿಯಾನಕ್ಕೂ ಮಹತ್ವದ ಯೋಗದಾನ ನೀಡಿದ್ದಾರೆ.