ಮುಂಬೈ: ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ಮೊಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದು, ಮಹಾ ವಿಕಾಸ್ ಆಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಬಿಕ್ಕಟ್ಟಿಗೆ ಕಾರಣವಾಗಿದೆ.
ಎಂವಿಎಯು ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೇ ಇರುವುದಕ್ಕೆ ಅಸಮಾಧಾನ ಹೊರಹಾಕಿರುವ ಆರಿಫ್ ಖಾನ್, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
‘ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಎಂವಿಎಯು ಒಬ್ಬನೇ ಒಬ್ಬ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಪಕ್ಷವು ಕನಿಷ್ಠ ಒಬ್ಬ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು ಎಂಬುದು ಮಹಾರಾಷ್ಟ್ರದ ವಿವಿಧ ಮುಸ್ಲಿಮ್ ಸಂಘಟನೆಗಳ ಮತ್ತು ಮುಖಂಡರ ನಿರೀಕ್ಷೆಯಾಗಿತ್ತು. ಆದರೆ ದುರದೃಷ್ಟವಶಾತ್ ಪಕ್ಷವು ಮುಸ್ಲಿಮ್ ಅಭ್ಯರ್ಥಿಗೆ ಅವಕಾಶ ನೀಡಿಲ್ಲ’ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
‘ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನನ್ನ ಹೆಸರು ಸೇರಿಸಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಆದರೆ ನಾನು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ’ ಎಂದು ಹೇಳಿದ್ದಾರೆ.