ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

LS Polls | ಐದನೇ ಹಂತದ ಮತದಾನ ಆರಂಭ, ಹಕ್ಕು ಚಲಾಯಿಸಿದ ಮಾಯಾವತಿ– ಅಂಬಾನಿ

Published 20 ಮೇ 2024, 2:19 IST
Last Updated 20 ಮೇ 2024, 2:19 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು (ಸೋಮವಾರ) ಆರಂಭಗೊಂಡಿದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶದ ರಾಯ್‌ಬರೇಲಿ, ಅಮೇಠಿ ಕ್ಷೇತ್ರಗಳಲ್ಲೂ ಮತದಾನ ನಡೆಯುತ್ತಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಬಿಜೆಪಿಯ ಸ್ಮೃತಿ ಇರಾನಿ (ಅಮೇಠಿ), ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್ (ಲಖನೌ) ಮತ್ತು ಪೀಯೂಷ್‌ ಗೋಯಲ್ (ಮುಂಬೈ ಉತ್ತರ), ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಹಾಗೂ ಆರ್‌ಜೆಡಿಯ ರೋಹಿಣಿ ಆಚಾರ್ಯ (ಸಾರಣ್) ಅವರು ಕಣದಲ್ಲಿದ್ದಾರೆ.

ಐದನೇ ಹಂತದಲ್ಲಿ ಬಿಹಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯುತ್ತಿದೆ. ಲೋಕಸಭಾ ಚುನಾವಣೆ ಜತೆಯಲ್ಲೇ ಒಡಿಶಾದ 35 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯುತ್ತಿದ್ದು, ಬಿಜೆಡಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಕಣದಲ್ಲಿದ್ದಾರೆ.

ನಾಲ್ಕನೇ ಹಂತದ ಮತದಾನದ ಬಳಿಕವೂ ಪ್ರಚಾರದ ಕಣದಲ್ಲಿ ಬಿಜೆಪಿ ಮತ್ತು ‘ಇಂಡಿಯಾ’ ಒಕ್ಕೂಟದ ಮಧ್ಯೆ ಪರಸ್ಪರ ಆರೋಪ, ವಾಗ್ದಾಳಿ ನಡೆದಿದ್ದವು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರದ ಮೇಲೆ ಬುಲ್ಡೋಜರ್‌ ಹರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದರ ವಿರುದ್ಧ ಕಾಂಗ್ರೆಸ್‌, ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಹಕ್ಕು ಚಲಾಯಿಸಿದ ಮಾಯಾವತಿ, ಅನಿಲ್ ಅಂಬಾನಿ

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪೀಯೂಷ್‌ ಗೋಯಲ್ ಮತದಾನ ಮಾಡಿದ್ದಾರೆ. ಲಖನೌ ಲೋಕಸಭಾ ಕ್ಷೇತ್ರದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮತದಾನ ಮಾಡಿದ್ದಾರೆ. ಇತ್ತ ಮುಂಬೈಯಲ್ಲಿ ಉದ್ಯಮಿ ಅನಿಲ್ ಅಂಬಾನಿ, ಬಾಲಿವುಡ್‌ ನಟ ಅಕ್ಷಯ್ ಕುಮಾರ್, ಫರ್ಹಾನ್ ಅಖ್ತರ್ ಅವರು ಮತದಾನದ ಹಕ್ಕು ಚಲಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT