ಚಿಕ್ಕಮಗಳೂರು: 'ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ' ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಸಚಿವ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎದುರು ಘೋಷಣೆ ಕೂಗಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಲು ಕೆ.ಜೆ.ಜಾರ್ಜ್ ಮತ್ತು ಜಯಪ್ರಕಾಶ್ ಹೆಗ್ಡೆ ನಗರಕ್ಕೆ ಬಂದಿದ್ದರು. ಆದ್ರಿಕ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿರುವ ಮಾಹಿತಿ ತಿಳಿದು ಘೋಷಣೆ ಕೂಗಲು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮೋದಿ ಭಾವಚಿತ್ರ ಹಿಡಿದು ಜಮಾಯಿಸಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು, ಎಲ್ಲರನ್ನೂ ಬಂಧಿಸಿ ಕರೆದೊಯ್ದರು.
'ನಾವು ಗಲಾಟೆ ಮಾಡಲು ಬಂದಿಲ್ಲ. ಪ್ರತಿಭಟನೆ ಮಾಡಲು ಬಂದಿದ್ದೇವೆ. ಆದರೂ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದರು.