ಪೀಣ್ಯ ದಾಸರಹಳ್ಳಿ: ಬಡವರ ಅಭಿವೃದ್ಧಿಗಾಗಿ ವಿಶ್ವಕರ್ಮ ಯೋಜನೆ, ಶೂನ್ಯ ಹಣದಲ್ಲಿ ಬ್ಯಾಂಕ್ ಖಾತೆ ತೆರೆಯುವ ಜನಧನ್ ಯೋಜನೆ, ವ್ಯಾಕ್ಸಿನ್, ಮೆಟ್ರೊ, ರಸ್ತೆಯಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದ್ದು ಪ್ರಧಾನಿ ನರೇಂದ್ರ ಮೋದಿ‘ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಮಲ್ಲಸಂದ್ರದ ಪೈಪ್ ಲೈನ್ ರಸ್ತೆಯ ಸೆಲೆಕ್ಷನ್ ಕಾರ್ನರ್ನಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆಯ ರೋಡ್ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
'ಶೋಭಾ ಕರಂದ್ಲಾಜೆ ಕೇಂದ್ರ ಸಚಿವರು, ಅನುಭವಿ ರಾಜಕಾರಣಿ ಕೂಡ. ಈಗಾಗಲೇ ಅವರು ಎಲ್ಲ ಕಡೆ ಭರ್ಜರಿ ಪ್ರಚಾರ ಮಾಡಿದ್ದು, ಉತ್ತಮ ಬೆಂಬಲ ವ್ಯಕ್ತವಾಗಿದೆ. ಅವರನ್ನು ಅಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಮತ್ತೊಮ್ಮೆ ದೇಶಕ್ಕಾಗಿ, ಅಭಿವೃದ್ಧಿಗಾಗಿ ಮೋದಿ ಅವರನ್ನು ಪ್ರಧಾನಿಯಾಗಿ ಮಾಡೋಣ' ಎಂದರು.
ಶಾಸಕ ಎಸ್. ಮುನಿರಾಜು ಮಾತನಾಡಿ ‘ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹೊಗೆಯಬೇಕು. ದೇಶದ ರಕ್ಷಣೆ, ಅಭಿವೃದ್ಧಿಗಾಗಿ ಮೋದಿ ಅವರಿಗೆ ಶಕ್ತಿ ತುಂಬಬೇಕು' ಎಂದು ಜನರಲ್ಲಿ ಮನವಿ ಮಾಡಿದರು.
ಮಲ್ಲಸಂದ್ರ ಪೈಪ್ ಸೆಲೆಕ್ಷನ್ ಕಾರ್ನರ್ ನಿಂದ ಬೈಲಪ್ಪ ಸರ್ಕಲ್ ಮೂಲಕ ದಾಸರಹಳ್ಳಿ ಮೆಟ್ರೊ ನಿಲ್ದಾಣದವರೆಗೆ ರೋಡ್ ಶೋ ನಡೆಸಿ, ಶೋಭಾ ಕರಂದ್ಲಾಜೆ ಪರವಾಗಿ ಮತಯಾಚಿಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ, ದಾಸರಹಳ್ಳಿ ಮಂಡಲ ಅಧ್ಯಕ್ಷ ಸೋಮಶೇಖರ್, ಪಾಲಿಕೆ ಮಾಜಿ ಸದಸ್ಯೆ ಉಮಾದೇವಿ ನಾಗರಾಜು, ಎಂ.ಮುನಿರಾಜು, ಬಿ.ಟಿ. ಶ್ರೀನಿವಾಸ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.