ಬೆಂಗಳೂರು: ಲೋಕಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ಪ್ರಚಾರ ಯೋಜನೆ ಅಂತಿಮಗೊಳಿಸಲು ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಬುಧವಾರದಿಂದ ಜಂಟಿ ಸಭೆಗಳನ್ನು ನಡೆಸಲಿವೆ. ಶುಕ್ರವಾರ ಬೆಂಗಳೂರಿನಲ್ಲಿ ಮೈತ್ರಿಕೂಟದ ಜಂಟಿ ಸಭೆ ನಡೆಯಲಿದೆ.
ಮೈಸೂರಿನಲ್ಲಿ ಬುಧವಾರ ಮೈತ್ರಿಕೂಟದ ಮೊದಲ ಜಂಟಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಜಂಟಿ ಹೋರಾಟಕ್ಕೆ ಚಾಲನೆ ನೀಡಲು ಬಿಜೆಪಿ– ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ. ಈ ಕಾರಣದಿಂದ ಮೊದಲ ಜಂಟಿ ಸಭೆಯನ್ನು ಅಲ್ಲಿಯೇ ನಡೆಸಲಾಗುತ್ತಿದೆ’ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಬೆಂಗಳೂರಿನ ಹೋಟೆಲ್ ಒಂದರಲ್ಲಿ ಶುಕ್ರವಾರ ರಾಜ್ಯಮಟ್ಟದ ಜಂಟಿ ಸಭೆ ನಡೆಯಲಿದೆ. ಬಿಜೆಪಿ ಮತ್ತು ಜೆಡಿಎಸ್ನ ತಲಾ 50 ಮಂದಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.