ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ 'ಸುಳ್ಳುಗಳ ಕಂತೆ' ಆಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಜಾರಿಗೊಳಿಸಲಿರುವ ಯೋಜನೆಗಳ ಕುರಿತು ಕಾಂಗ್ರೆಸ್ ಪಕ್ಷವು ಇಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.
ಹಲವು ದಶಕಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಪಕ್ಷವು ಈ ಹಿಂದಿನ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಬಿಜೆಪಿ ದೂರಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, 'ದಶಕಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಈಗ 'ನ್ಯಾಯ'ದ ಬಗ್ಗೆ ಮಾತನಾಡುತ್ತಿದೆ. ಆದರೆ ಅಧಿಕಾರದಲ್ಲಿದ್ದಾಗ ಯಾವತ್ತೂ ನ್ಯಾಯ ನೀಡಿರಲಿಲ್ಲ' ಎಂದು ಆರೋಪಿಸಿದ್ದಾರೆ.