ಬೀದರ್: ಕಾಂಗ್ರೆಸ್ ಪಕ್ಷವು ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆಯವರ ಮಗ, ಯುವ ನಾಯಕ ಸಾಗರ್ ಖಂಡ್ರೆಯವರಿಗೆ ನೀಡಿದೆ. ಗುರುವಾರ ರಾತ್ರಿ ಅವರ ಹೆಸರು ಅಧಿಕೃತವಾಗಿ ಘೋಷಿಸಲಾಗಿದೆ.
ಆರಂಭದಿಂದಲೂ ಸಾಗರ್ ಖಂಡ್ರೆಯವರ ಹೆಸರು ಕೇಳಿ ಬರುತ್ತಿತ್ತು. ಅದಕ್ಕೆ ಪೂರಕವಾಗಿ ಜಿಲ್ಲೆಯಾದ್ಯಂತ ಪ್ರಚಾರ ಕೂಡ ಕೈಗೊಳ್ಳಲಾಗಿತ್ತು. ಪ್ರತಿಯೊಂದು ಹಬ್ಬ, ಹರಿದಿನ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜಿಲ್ಲಾ ಪ್ರವಾಸ ಕೈಗೊಂಡಾಗ ಜಿಲ್ಲೆಯಾದ್ಯಂತ ಸಾಗರ್ ಖಂಡ್ರೆಯವರ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿದ್ದವು. ಈಗ ಅಂತಿಮವಾಗಿ ಸಾಗರ್ ಅವರಿಗೆ ಟಿಕೆಟ್ ಖಚಿತ ಎನ್ನಲಾಗಿದೆ. ಪಕ್ಷದ ಕಾರ್ಯಕರ್ತರು, ಅವರ ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದೆ.
ಸಾಗರ್ ಖಂಡ್ರೆಯವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರ ಮಗ. ಸಾಗರ್, ಸದ್ಯ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕಳೆದ ವರ್ಷವಷ್ಟೇ ಕಾಂಗ್ರೆಸ್ ವಿದ್ಯಾರ್ಥಿ ಒಕ್ಕೂಟದ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲಿನಿಂದಲೂ ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಹಾಗೂ ಸಾಗರ್ ಖಂಡ್ರೆ ಹೆಸರು ಟಿಕೆಟ್ಗಾಗಿ ಕೇಳಿ ಬರುತ್ತಿತ್ತು.
ಟಿಕೆಟ್ ಖಚಿತವಾದ ಬೆನ್ನಲ್ಲೇ ಸಾಗರ್ ಖಂಡ್ರೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮನೆಗೆ ತೆರಳಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮುಖಂಡರು ಖಚಿತಪಡಿಸಿದ್ದಾರೆ.